IND vs ENG: ರಾಂಚಿ ಟೆಸ್ಟ್​ ಪಂದ್ಯಕ್ಕೆ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಬೆದರಿಕೆ!

|

Updated on: Feb 21, 2024 | 9:54 PM

IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನಿಂದ ಬೆದರಿಕೆ ಎದುರಾಗಿದೆ. ನಾಲ್ಕನೇ ಟೆಸ್ಟ್ ಪಂದ್ಯವನ್ನು ತಡೆಯುವಂತೆ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಗೆ ಗುರುಪತ್ವಂತ್ ಸಿಂಗ್ ಪನ್ನು ಮನವಿ ಮಾಡಿ ಯೂಟ್ಯೂಬ್‌ನಲ್ಲಿ ವೀಡಿಯೊವೊಂದನ್ನು ಬಿಡುಗಡೆ ಮಾಡಿದ್ದಾನೆ

IND vs ENG: ರಾಂಚಿ ಟೆಸ್ಟ್​ ಪಂದ್ಯಕ್ಕೆ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಬೆದರಿಕೆ!
ಭಾರತ- ಇಂಗ್ಲೆಂಡ್
Follow us on

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಫೆಬ್ರವರಿ 23 ರಿಂದ ರಾಂಚಿಯಲ್ಲಿ ಆರಂಭವಾಗಲಿದೆ. ಎರಡೂ ತಂಡಗಳು ಈಗಾಗಲೇ ರಾಂಚಿ ತಲುಪಿದ್ದು, ಈ ಟೆಸ್ಟ್‌ಗಾಗಿ ಅಭ್ಯಾಸ ಆರಂಭಿಸಿವೆ. ಆದರೆ ಈ ಟೆಸ್ಟ್ ಪಂದ್ಯಕ್ಕೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನಿಂದ (Gurpatwant Singh Pannun) ಬೆದರಿಕೆ ಎದುರಾಗಿದೆ. ನಾಲ್ಕನೇ ಟೆಸ್ಟ್ ಪಂದ್ಯವನ್ನು ತಡೆಯುವಂತೆ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಗೆ ಗುರುಪತ್ವಂತ್ ಸಿಂಗ್ ಪನ್ನುನ್ ಮನವಿ ಮಾಡಿ ಯೂಟ್ಯೂಬ್‌ನಲ್ಲಿ ವೀಡಿಯೊವೊಂದನ್ನು ಬಿಡುಗಡೆ ಮಾಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ

ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆಯ ಹಿನ್ನೆಲೆಯಲ್ಲಿ ಜಾರ್ಖಂಡ್ ಪೊಲೀಸರು ಅಲರ್ಟ್ ಆಗಿದ್ದು ಪಂದ್ಯ ನಡೆಯುವ ಜೆಎಸ್​ಸಿಎ ಅಂತರಾಷ್ಟ್ರೀಯ ಕ್ರೀಡಾಂಗಣ ಸಂಕೀರ್ಣದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಹಾಗೆಯೇ ಪಂದ್ಯಕ್ಕೆ ಅಡ್ಡಿಪಡಿಸುವಂತೆ ಪ್ರಚೋಧನೆ ನೀಡಿರುವ ಗುರುಪತ್ವಂತ್ ಸಿಂಗ್ ವಿರುದ್ಧ ದೂರ್ವಾ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈಗಾಗಲೇ ತನಿಖೆ ಆರಂಭವಾಗಿದೆ ಎಂದು ಡಿಎಸ್ಪಿ ಪಿ.ಕೆ.ಮಿಶ್ರಾ ತಿಳಿಸಿದ್ದಾರೆ.

ವಾಸ್ತವವಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಈ ರೀತಿಯ ಬೆದರಿಕೆ ಒಡ್ಡುತ್ತಿರುವುದು ಇದೇ ಮೊದಲೆನಲ್ಲ. ಇದಕ್ಕೂ ಮುನ್ನ ಪನ್ನು ಭಾರತಕ್ಕೆ ಹಲವಾರು ಬಾರಿ ಬೆದರಿಕೆ ಹಾಕಿದ್ದಾನೆ. ಈ ಹಿಂದೆ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಬೆದರಿಕೆಯೊಡ್ಡಿದ್ದ ಪನ್ನು, ಏರ್ ಇಂಡಿಯಾ ವಿಮಾನಗಳು ಮತ್ತು ಅಮೆರಿಕ ಮತ್ತು ಕೆನಡಾದಲ್ಲಿರುವ ಭಾರತೀಯರನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಿದ್ದ.

ಜಾಮೀನು ರಹಿತ ಬಂಧನ ವಾರಂಟ್

ಗುರುಪತ್ವಂತ್ ಸಿಂಗ್ ಪನ್ನುನ್ ಅವರು ಸಿಖ್ಸ್ ಫಾರ್ ಜಸ್ಟಿಸ್ (SFJ) ಎಂಬ ಪ್ರತ್ಯೇಕತಾವಾದಿ ಸಂಘಟನೆಯ ಸಂಸ್ಥಾಪಕರಲ್ಲಿ ಒಬ್ಬ. 2007 ರಲ್ಲಿ ಸ್ಥಾಪಿತವಾದ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯನ್ನು ಭಾರತ ಸರ್ಕಾರ 2019 ರಲ್ಲಿ ನಿಷೇಧಿಸಿತು. ಅಂದಿನಿಂದ ಪನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ ಕಣ್ಗಾವಲಿನಲ್ಲಿದ್ದ. ಕಾನೂನುಬಾಹಿರ ಚಟುವಟಿಕೆಗಳ ಕಾಯಿದೆಯಡಿ 2020 ರಲ್ಲಿ ಭಾರತ ಸರ್ಕಾರವು ಪನ್ನುವನ್ನು ಭಯೋತ್ಪಾದಕ ಎಂದು ಘೋಷಿಸಿತು. ಫೆಬ್ರವರಿ 3, 2021 ರಂದು, ವಿಶೇಷ NIA ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತು.

ಟೆಸ್ಟ್ ಪಂದ್ಯದ ಬಗ್ಗೆ ಮಾಹಿತಿ

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ಈಗಾಗಲೇ 3 ಪಂದ್ಯಗಳು ನಡೆದಿವೆ. ಇದರಲ್ಲಿ ಮೊದಲ ಪಂದ್ಯವನ್ನು ಇಂಗ್ಲೆಂಡ್ ತಂಡ ಗೆದ್ದುಕೊಂಡರೆ, ಉಳಿದೆರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ಜಯ ಭೇರಿ ಬಾರಿಸಿದೆ. ಅದರಲ್ಲೂ ರಾಜ್​ಕೋಟ್​ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ಬರೋಬ್ಬರಿ 434 ರನ್​ಗಳಿಂದ ಗೆದ್ದು ಇತಿಹಾಸ ನಿರ್ಮಿಸಿದೆ. ಪ್ರಸ್ತುತ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಕಾಯ್ದುಕೊಂಡಿರುವ ಭಾರತ ರಾಂಚಿ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳುವ ಇರಾದೆಯಲ್ಲಿದೆ. ಇತ್ತ ನಾಲ್ಕನೇ ಟೆಸ್ಟ್ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ ಗುರಿಯೊಂದಿಗೆ ಆಂಗ್ಲ ಪಡೆ ಅಖಾಡಕ್ಕಿಳಿಯಲು ಸಜ್ಜಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ