SL vs IND: ಶ್ರೀಲಂಕಾ ವಿರುದ್ಧ 9 ವಿಕೆಟ್​ಗಳಿಂದ ಗೆದ್ದ ಟೀಂ ಇಂಡಿಯಾ

SL W vs IND W: ಭಾರತ ಮಹಿಳಾ ಕ್ರಿಕೆಟ್ ತಂಡವು ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ಆರಂಭಿಕ ಪಂದ್ಯದಲ್ಲಿ ಶ್ರೀಲಂಕಾವನ್ನು 9 ವಿಕೆಟ್‌ಗಳಿಂದ ಸೋಲಿಸಿದೆ. ಮಳೆ ಪೀಡಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 147 ರನ್ ಗಳಿಸಿತು. ಭಾರತದ ಪರ ಸ್ನೇಹ ರಾಣಾ 3 ವಿಕೆಟ್ ಪಡೆದರು. ಭಾರತ 148 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟಿತು.

SL vs IND: ಶ್ರೀಲಂಕಾ ವಿರುದ್ಧ 9 ವಿಕೆಟ್​ಗಳಿಂದ ಗೆದ್ದ ಟೀಂ ಇಂಡಿಯಾ
India Women

Updated on: Apr 27, 2025 | 6:33 PM

ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿರುವ ಶ್ರೀಲಂಕಾ, ದಕ್ಷಿಣ ಆಫ್ರಿಕಾ ಹಾಗೂ ಭಾರತ ವನಿತಾ ತಂಡಗಳ ನಡುವಿನ ತ್ರಿಕೋನ ಸರಣಿ ಇಂದಿನಿಂದ ಆರಂಭವಾಗಿದೆ. ಏಪ್ರಿಲ್ 27 ರಿಂದ ಪ್ರಾರಂಭವಾಗಿರುವ ಈ ತ್ರಿಕೋನ ಸರಣಿ 15 ದಿನಗಳ ಕಾಲ ನಡೆಯಲಿದ್ದು, ಒಟ್ಟು 7 ಪಂದ್ಯಗಳು ನಡೆಯಲಿವೆ. ಅದರಂತೆ ಇಂದಿನ ಮೊದಲ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಹಾಗೂ ಭಾರತ ವನಿತಾ (SL W vs IND W) ಪಡೆಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆ ಹರ್ಮನ್​ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ ಚಾಮರಿ ಅಟಪಟ್ಟು ನಾಯಕತ್ವದ ಶ್ರೀಲಂಕಾ ತಂಡವನ್ನು 9 ವಿಕೆಟ್​ಗಳಿಂದ ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ತತ್ತರಿಸಿದ ಲಂಕಾ ಇನ್ನಿಂಗ್ಸ್

ಮಳೆ ಪೀಡಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮಳೆಯಿಂದಾಗಿ ಈ ಪಂದ್ಯವನ್ನು ತಲಾ 39 ಓವರ್​ಗಳಿಗೆ ಇಳಿಸಲಾಯಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ ಕೊನೆಯ ಓವರ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ತಂಡದ ಪರ ಆರಂಭಿಕ ಆಟಗಾರ್ತಿ ಹಸಿನಿ ಪೆರೇರಾ ಅತ್ಯಧಿಕ 30 ರನ್ ಬಾರಿಸಿದರೆ, ಕವಿಶಾ ದಿಲ್ಹಾರಿ 25 ರನ್ ಹಾಗೂ ವಿಕೆಟ್ ಕೀಪರ್ ಅನುಷ್ಕಾ ಸಂಜೀವಿನಿ 22 ರನ್​ಗಳ ಕಾಣಿಕೆ ನೀಡಿದರು. ಇನ್ನು ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಮಿಂಚಿದ ಸ್ನೇಹ ರಾಣಾ ಅತ್ಯಧಿಕ 3 ವಿಕೆಟ್ ಪಡೆದರೆ, ನಲ್ಲಪುರರೆಡ್ಡಿ ಚರಣಿ ಹಾಗೂ ದೀಪ್ತಿ ಶರ್ಮಾ ತಲಾ 2 ವಿಕೆಟ್ ಪಡೆದರು. ಅರುಂಧತಿ ರೆಡ್ಡಿ ಕೂಡ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಭಾರತಕ್ಕೆ 9 ವಿಕೆಟ್​ಗಳ ಜಯ

147 ರನ್​​ಗಳ ಸುಲಭ ಗುರಿ ಬೆನ್ನಟ್ಟಿದ ಭಾರತ ವನಿತಾ ಪಡೆ ಕೇವಲ 1 ವಿಕೆಟ್ ಕಳೆದುಕೊಂಡು 29.4 ಓವರ್​ಗಳಲ್ಲಿ ಗೆಲುವಿನ ನಗೆಬೀರಿತು. ಆರಂಭಿಕ ಆಟಗಾರ್ತಿಯರಾದ ಪ್ರತೀಕಾ ರಾವಲ್ ಹಾಗೂ ಸ್ಮೃತಿ ಮಂಧಾನ ಮೊದಲ ವಿಕೆಟ್​ಗೆ 54 ರನ್​​ಗಳ ಜೊತೆಯಾಟ ನೀಡಿದರು. ಈ ವೇಳೆ ಉಪನಾಯಕಿ ಮಂಧಾನ 46 ಎಸೆತಗಳಲ್ಲಿ 6 ಬೌಂಡರಿ ಸಹಿತ 43 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಜೊತೆಯಾದ ಪ್ರತೀಕಾ ಹಾಗೂ ಹರ್ಲೀನ್ ಡಿಯೋಲ್ ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಆರಂಭಿಕ ಆಟಗಾರ್ತಿ ಪ್ರತೀಕಾ 62 ಎಸೆತಗಳಲ್ಲಿ 7 ಬೌಂಡರಿ ಸಹಿತ ಅಜೇಯ 50 ರನ್ ಬಾರಿಸಿದರೆ, ಹರ್ಲೀನ್ 71 ಎಸೆತಗಳಲ್ಲಿ 4 ಬೌಂಡರಿ ಸಹಿತ ಅಜೇಯ 48 ರನ್‌ ಬಾರಿಸಿದರು. ಇದೀಗ ಭಾರತ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 29 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us