ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯವು ಶನಿವಾರ ಹೈದರಾಬಾದ್ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಹೈದರಾಬಾದ್ಗೆ ಆಗಮಿಸಿವೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ ಅಜೇಯ ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡಲು ಪ್ರಯತ್ನಿಸಲಿದೆ. ಈಗಾಗಲೇ ಸರಣಿಯನ್ನು ಕೈವಶ ಮಾಡಿಕೊಂಡಿರುವ ಕಾರಣ, ಸರಣಿಯಲ್ಲಿ ಇದುವರೆಗೆ ಬೆಂಚ್ ಕಾದಿರುವ ಆಟಗಾರರಿಗೆ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆಗಳಾಗಬಹುದು. ಅದರಂತೆ ಮೂರನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಯಾರ್ಯಾರಿಗೆ ಅವಕಾಶ ನೀಡಲಿದ್ದಾರೆ ಎಂಬುದನ್ನು ನೋಡುವುದಾದರೆ..
ಸೂರ್ಯಕುಮಾರ್ ಯಾದವ್ ಬಾಂಗ್ಲಾದೇಶ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ. ಹೀಗಾಗಿ ಇದುವರೆಗೆ ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ಹರ್ಷಿತ್ ರಾಣಾ ಮತ್ತು ತಿಲಕ್ ವರ್ಮಾ ಅವರಿಗೆ ಈ ಸರಣಿಯಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ. ಹರ್ಷಿತ್ ರಾಣಾ ಇನ್ನೂ ಚೊಚ್ಚಲ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಮೂರನೇ ಪಂದ್ಯದಲ್ಲಿ ಹರ್ಷಿತ್ ರಾಣಾಗೆ ಅವಕಾಶ ನೀಡಬಹುದು.
ಹರ್ಷಿತ್ ರಾಣಾಗೆ ಅವಕಾಶ ಸಿಕ್ಕರೆ ಟೀಮ್ ಮ್ಯಾನೇಜ್ಮೆಂಟ್ ಮಯಾಂಕ್ ಯಾದವ್ ಅವರಿಗೆ ವಿಶ್ರಾಂತಿ ನೀಡಬಹುದು. ಮಯಾಂಕ್ರಂತೆ ಐಪಿಎಲ್ನಲ್ಲಿ ಕಮಾಲ್ ಮಾಡಿದ್ದ ಹರ್ಷಿತ್ ರಾಣಾ ಕೆಕೆಆರ್ ಪರ ಅದ್ಭುತ ಪ್ರದರ್ಶನ ನೀಡಿದ್ದರು. ಇಡೀ ಆವೃತ್ತಿಯಲ್ಲಿ ಅವರು 18 ವಿಕೆಟ್ ಪಡೆದಿದ್ದರು. ಕೆಕೆಆರ್ ತಂಡ ಚಾಂಪಿಯನ್ ಆಗುವಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಅವರಿಗೆ ಮೂರನೇ ಪಂದ್ಯದಲ್ಲಿ ಆಡುವ ಅವಕಾಶ ಸಿಗಬಹುದು.
ಬಾಂಗ್ಲಾದೇಶ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್ ಉತ್ತಮ ಆರಂಭ ಪಡೆದ ಹೊರತಾಗಿಯೂ ಅದನ್ನು ದೊಡ್ಡ ಸ್ಕೋರ್ ಆಗಿ ಪರಿವರ್ತಿಸಲು ವಿಫಲರಾಗಿದ್ದರು. ಹೀಗಾಗಿ ಅವರ ಬದಲು ಜಿತೇಶ್ ಶರ್ಮಾಗೆ ಅವಕಾಶ ಸಿಕ್ಕರೂ ಸಿಗಬಹುದು. ಹಾಗೆಯೇ ವರುಣ್ ಚಕ್ರವರ್ತಿ ಬದಲಿಗೆ ಮತ್ತೊಬ್ಬ ರ್ವಿಸ್ಟ್ ಸ್ಪಿನ್ನರ್ ರವಿ ಬಿಷ್ಣೋಯಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.
ಭಾರತ ಸಂಭಾವ್ಯ ತಂಡ: ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ನಿತೀಶ್ ಕುಮಾರ್ ರೆಡ್ಡಿ, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಹರ್ಷಿತ್ ರಾಣಾ.
ಬಾಂಗ್ಲಾದೇಶ ಸಂಭಾವ್ಯ ತಂಡ: ಪರ್ವೇಜ್ ಹೊಸೈನ್ ಎಮನ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ಮೆಹಿದಿ ಹಸನ್ ಮಿರಾಜ್, ಮಹೇದಿ ಹಸನ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ತಂಝಿಮ್ ಹಸನ್ ಸಾಕಿಬ್, ಮುಸ್ತಫಿಜುರ್ ರಹ್ಮನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ