
ಜುಲೈ ತಿಂಗಳಲ್ಲಿ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವೆ ಟಿ20 ಹಾಗೂ ಏಕದಿನ ಸರಣಿ ನಡೆಯಲಿದೆ. ಈ ಸರಣಿಗಾಗಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ಪ್ರವಾಸದಲ್ಲಿ ಮೊದಲಿಗೆ ಉಭಯ ತಂಡಗಳ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಜುಲೈ 1 ರಿಂದ ಆರಂಭವಾಗಲಿರುವ ಟಿ20 ಸರಣಿ ಜುಲೈ 11 ರವರೆಗೆ ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ ಈಗಾಗಲೇ ತಂಡವನ್ನು ಸಹ ಪ್ರಕಟಿಸಿತ್ತು. ಟಿ20 ಸರಣಿಯ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಜುಲೈ 14 ರಿಂದ ಆರಂಭವಾಗಲಿರುವ ಏಕದಿನ ಸರಣಿ ಜುಲೈ 19 ರವರೆಗೆ ನಡೆಯಲಿದ್ದು, ಇದೀಗ ಈ ಏಕದಿನ ಸರಣಿಗಾಗಿ ಬಿಸಿಸಿಐ (BCCI) 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಪ್ರವಾಸದಲ್ಲಿ ವಿರಾಟ್ ಕೊಹ್ಲಿ (Virat Kohli) ಕಣಕ್ಕಿಳಿಯುತ್ತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದು, ಹಲವು ಯುವ ಆಟಗಾರರಿಗೂ ತಂಡದಲ್ಲಿ ಅವಕಾಶ ನೀಡಲಾಗಿದೆ.
ಎಂದಿನಂತೆ ಶುಭ್ಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ಉಪನಾಯಕತ್ವವಹಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರನ್ನು ಈ ಸರಣಿಗೆ ಆಯ್ಕೆ ಮಾಡಲಾಗಿದ್ದು, ಇದರೊಂದಿಗೆ ಇವರಿಬ್ಬರು 2027 ರ ಏಕದಿನ ವಿಶ್ವಕಪ್ ತಂಡದಲ್ಲಿ ಇರಲಿದ್ದಾರೆ ಎಂಬುದು ಖಚಿತವಾದ್ದಂತ್ತಾಗಿದೆ. ಆದರೆ ಅಫ್ಘಾನಿಸ್ತಾನದ ವಿರುದ್ಧ ಶತಕ ಬಾರಿಸಿದ್ದ ಯಶಸ್ವಿ ಜೈಸ್ವಾಲ್ರನ್ನು ಈ ಪ್ರವಾಸದಿಂದ ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ. ಕೆಎಲ್ ರಾಹುಲ್ ಮತ್ತು ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ಗಳಾಗಿ ಆಯ್ಕೆ ಮಾಡಲಾಗಿದೆ.
ಸ್ಪಿನ್ ಆಲ್ ರೌಂಡರ್ ವಿಭಾಗದಲ್ಲಿ ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಬೌಲಿಂಗ್ ಆಲ್ರೌಂಡರ್ ಆಗಿ ನಿತೀಶ್ ಕುಮಾರ್ ರೆಡ್ಡಿ ತಂಡದಲ್ಲಿದ್ದಾರೆ. ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಕಾರಣ ಹಾರ್ದಿಕ್ ಪಾಂಡ್ಯರನ್ನು ಈ ಸರಣಿಯಿಂದ ಕೈಬಿಡಲಾಗಿದೆ. ಉಳಿದಂತೆ ಕುಲ್ದೀಪ್ ಯಾದವ್ ಸ್ಪಿನ್ ವಿಭಾಗದ ಜವಾಬ್ದಾರಿಗಳನ್ನು ನಿರ್ವಹಿಸಿದರೆ, ಜಸ್ಪ್ರೀತ್ ಬುಮ್ರಾ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಬುಮ್ರಾ ಜೊತೆಗೆ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಮತ್ತು ಗುರ್ನೂರ್ ಬ್ರಾರ್ ಅವರನ್ನು ಬೌಲಿಂಗ್ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ.
🚨 News 🚨
India’s ODI squad for the England tour announced.
𝗡𝗢𝗧𝗘: Varun Chakaravarthy has been ruled out of the Ireland T20I Series as he continues his rehab at the BCCI COE.
More Details ▶️ https://t.co/wOdXTQqJto #TeamIndia | #ENGvIND pic.twitter.com/t0GypgM4kp
— BCCI (@BCCI) June 21, 2026
ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತ ಏಕದಿನ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್.
Published On - 2:18 pm, Sun, 21 June 26