
ಗುವಾಹಟಿಯಲ್ಲಿ ನಡೆದ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ ಅಮೋಘ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಮೂಲಕ ಬರೋಬ್ಬರಿ 26 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲುವಲ್ಲಿ ಆಫ್ರಿಕಾ ಪಡೆ ಯಶಸ್ವಿಯಾಗಿದೆ.
ಇದಕ್ಕೂ ಮುನ್ನ ಭಾರತದಲ್ಲಿ ಸೌತ್ ಆಫ್ರಿಕಾ ಟೆಸ್ಟ್ ಸರಣಿ ಗೆದ್ದಿದ್ದು 1999 ರಲ್ಲಿ. ಇದಾದ ಬಳಿಕ ತವರಿನಲ್ಲಿ ಟೀಮ್ ಇಂಡಿಯಾವನ್ನು ಬಗ್ಗು ಬಡಿಯಲು ಸಾಧ್ಯವಾಗಿರಲಿಲ್ಲ. ಇದೀಗ ಎರಡು ದಶಕಗಳ ಬಳಿಕ ಭಾರತ ತಂಡವನ್ನು ಹೀನಾಯವಾಗಿ ಸೋಲಿಸಿ ಟೆಂಬಾ ಬವುಮಾ ಪಡೆ ಹೊಸ ಇತಿಹಾಸ ನಿರ್ಮಿಸಿದೆ.
ಕೊಲ್ಕತ್ತಾದಲ್ಲಿ ನಡೆದ ಈ ಸರಣಿಯ ಮೊದಲ ಮ್ಯಾಚ್ನಲ್ಲಿ ಸೌತ್ ಆಫ್ರಿಕಾ ತಂಡ 30 ರನ್ಗಳ ಜಯ ಸಾಧಿಸಿತ್ತು. ಇದೀಗ ಗುವಾಹಟಿಯಲ್ಲೂ ಭಾರತ ತಂಡವನ್ನು ಬಗ್ಗು ಬಡಿಯುವಲ್ಲಿ ಯಶಸ್ವಿಯಾಗಿದೆ. ಈ ಫಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್ನಲ್ಲಿ ಬರೋಬ್ಬರಿ 489 ರನ್ ಕಲೆಹಾಕಿದ್ದರು.
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಕೇವಲ 201 ರನ್ಗಳು ಮಾತ್ರ. ಈ ಮೂಲಕ ಮೊದಲ ಇನಿಂಗ್ಸ್ನಲ್ಲಿ 288 ರನ್ಗಳ ಹಿನ್ನಡೆ ಅನುಭವಿಸಿತು.
288 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ ತಂಡವು 5 ವಿಕೆಟ್ ನಷ್ಟಕ್ಕೆ 260 ರನ್ಗಳಿಸಿ ಡಿಕ್ಲೇರ್ ಘೋಷಿಸಿತು. ಈ ಮೂಲಕ ಭಾರತ ತಂಡಕ್ಕೆ ಕೊನೆಯ ಇನಿಂಗ್ಸ್ನಲ್ಲಿ 549 ರನ್ಗಳ ಕಠಿಣ ಗುರಿ ನೀಡಿದ್ದರು.
ಈ ಕಠಿಣ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯದ ವೇಳೆ ಕೆಎಲ್ ರಾಹುಲ್ (6) ಹಾಗೂ ಯಶಸ್ವಿ ಜೈಸ್ವಾಲ್ (13) ಅವರ ವಿಕೆಟ್ ಕಳೆದುಕೊಂಡಿತು. ಇನ್ನು ಐದನೇ ದಿನದಾಟದ ಆರಂಭದಲ್ಲೇ ಕುಲ್ದೀಪ್ ಯಾದವ್ (5) ಔಟಾಗಿದ್ದಾರೆ. ಇದರ ಬೆನ್ನಲ್ಲೇ ಧ್ರುವ್ ಜುರೆಲ್ (2) ಕೂಡ ವಿಕೆಟ್ ಒಪ್ಪಿಸಿದ್ದಾರೆ.
ಈ ಹಂತದಲ್ಲಿ ಕಣಕ್ಕಿಳಿದ ನಾಯಕ ರಿಷಭ್ ಪಂತ್ 13 ರನ್ ಬಾರಿಸಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಇದಾಗ್ಯೂ ಏಕಾಂಗಿ ಹೋರಾಟ ಮುಂದುವರೆಸಿದ ರವೀಂದ್ರ ಜಡೇಜಾ 54 ರನ್ ಬಾರಿಸಿದರು. ಆದರೆ ಅಂತಿಮವಾಗಿ 140 ರನ್ಗಳಿಗೆ ಆಲೌಟ್ ಆಗುವ ಮೂಲಕ ಟೀಮ್ ಇಂಡಿಯಾ 408 ರನ್ಗಳಿಂದ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡ 26 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿದೆ.
ಸೌತ್ ಆಫ್ರಿಕಾ ಪ್ಲೇಯಿಂಗ್ 11: ಐಡೆನ್ ಮಾರ್ಕ್ರಾಮ್, ರಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಟ್ರಿಸ್ಟನ್ ಸ್ಟಬ್ಸ್, ಕೈಲ್ ವೆರ್ರೆನ್ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಸೆನುರಾನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.
ಇದನ್ನೂ ಓದಿ: ಟ್ರಾವಿಸ್ ಹೆಡ್ ಸಿಡಿಲಬ್ಬರದಿಂದ ಆಸ್ಟ್ರೇಲಿಯಾಗೆ 17 ಕೋಟಿ ರೂ. ನಷ್ಟ!
ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಧ್ರುವ ಜುರೆಲ್, ರಿಷಭ್ ಪಂತ್ (ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.