‘ಭಾರತಕ್ಕೆ ಹೆಮ್ಮೆಯ ಕ್ಷಣ’; ಮಹಿಳಾ ಪಡೆಯನ್ನು ಅಭಿನಂದಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ ಏಷ್ಯಾಕಪ್ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಗೆದ್ದು ದಾಖಲೆಯ 8ನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಮಹತ್ವದ ಸಾಧನೆಗೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ತಂಡವನ್ನು ಅಭಿನಂದಿಸಿದ್ದು, ಅವರ ಆತ್ಮವಿಶ್ವಾಸ ಮತ್ತು ಯುವ ಪೀಳಿಗೆಗೆ ಸ್ಫೂರ್ತಿಯಾಗಿದ್ದಕ್ಕೆ ಶ್ಲಾಘಿಸಿದ್ದಾರೆ.

‘ಭಾರತಕ್ಕೆ ಹೆಮ್ಮೆಯ ಕ್ಷಣ; ಮಹಿಳಾ ಪಡೆಯನ್ನು ಅಭಿನಂದಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ
ಭಾರತ ತಂಡ, ಮೋದಿ

Updated on: Sep 14, 2026 | 9:01 PM

ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು ಮಣಿಸಿ ದಾಖಲೆಯ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು. ಮಹಿಳಾ ಪಡೆಯ ಈ ಸಾಧನೆಗೆ ದೇಶದಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇದೀಗ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದು, ತಂಡವನ್ನು ಶ್ಲಾಘಿಸಿದ್ದಾರೆ.

ಭಾರತೀಯ ಕ್ರಿಕೆಟ್‌ಗೆ ಹೆಮ್ಮೆಯ ಕ್ಷಣ

ತಮ್ಮ ಎಕ್ಸ್ ಖಾತೆಯಲ್ಲಿ ಭಾರತ ಮಹಿಳಾ ತಂಡವನ್ನು ಅಭಿನಂದಿಸಿರುವ ಪ್ರಧಾನಿ ಮೋದಿ,‘ಏಷ್ಯಾಕಪ್ ಗೆಲುವು ಭಾರತೀಯ ಕ್ರಿಕೆಟ್‌ಗೆ ಹೆಮ್ಮೆಯ ಕ್ಷಣ. ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಅವರ ಆತ್ಮವಿಶ್ವಾಸ, ಸ್ಥಿರತೆ ಮತ್ತು ಉತ್ತಮ ಮನೋಭಾವವು ಪಂದ್ಯಾವಳಿಯಾದ್ಯಂತ ಪ್ರದರ್ಶನಗೊಂಡಿತು. ಈ ತಂಡದ ಗೆಲುವು ದೇಶದ ಲಕ್ಷಾಂತರ ಯುವಕರನ್ನು ಆಡಲು ಮತ್ತು ಮಿಂಚಲು ಪ್ರೇರೇಪಿಸುತ್ತದೆ ಎಂದು ಆಶಿಸುತ್ತೇವೆ’ ಎಂದಿದ್ದಾರೆ.

ಹೆಣ್ಣುಮಕ್ಕಳಿಗೆ ದೊಡ್ಡ ಸ್ಫೂರ್ತಿಯ ಸೆಲೆ

ಹಾಗೆಯೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹ,‘ಮಹಿಳಾ ಟಿ20 ಏಷ್ಯಾಕಪ್ ಗೆದ್ದುಕೊಂಡಿರುವ ಟೀಂ ಇಂಡಿಯಾದ ಎಲ್ಲಾ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಪೂರ್ತಿ ಟೂರ್ನಮೆಂಟ್‌ನಾದ್ಯಂತ ತಂಡವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಅವರು, ಆಡಿದ ಎಲ್ಲಾ ಪಂದ್ಯಗಳಲ್ಲೂ ಜಯ ಸಾಧಿಸಿದ್ದಾರೆ. ಈ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಪ್ರಶಸ್ತಿ ಗೆಲ್ಲುವ ಮೂಲಕ ನಮ್ಮ ಯುವಜನರಿಗೆ, ಅದರಲ್ಲೂ ವಿಶೇಷವಾಗಿ ನಮ್ಮ ಹೆಣ್ಣುಮಕ್ಕಳಿಗೆ ದೊಡ್ಡ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಮಹಿಳಾ ಪಡೆ ಭವಿಷ್ಯದಲ್ಲಿಯೂ ಯಶಸ್ಸು ಮತ್ತು ಶ್ರೇಷ್ಠತೆಯ ಇನ್ನೂ ಅನೇಕ ಸ್ಫೂರ್ತಿದಾಯಕ ಅಧ್ಯಾಯಗಳನ್ನು ಬರೆಯಲಿದ್ದಾರೆ ಎಂಬ ವಿಶ್ವಾಸ ನನಗಿದೆ’ ಎಂದು ಬರೆದುಕೊಂಡಿದ್ದಾರೆ.

ಪಂದ್ಯ ಹೀಗಿತ್ತು

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಅವರ ಅರ್ಧಶತಕಗಳ ಬಲದಿಂದ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 183 ರನ್ ಕಲೆಹಾಕಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಶ್ರೀಲಂಕಾ 20 ಓವರ್‌ಗಳಲ್ಲಿ 111 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು. ಭಾರತದ ಪರ ಶ್ರೀ ಚರಣಿ 4 ವಿಕೆಟ್‌ ಪಡೆದರೆ, ದೀಪ್ತಿ ಶರ್ಮಾ 3 ವಿಕೆಟ್‌ಗಳನ್ನು ಪಡೆದರು. ಭಾರತ ತಂಡವು ಪ್ರತಿ ಬಾರಿಯೂ ಫೈನಲ್‌ನಲ್ಲಿ ಆಡಿದೆ. ದುಬೈನಲ್ಲಿ 8 ನೇ ಬಾರಿಗೆ ಪ್ರಶಸ್ತಿಯನ್ನು ಗೆಲ್ಲುವ ಮೂಲಕ, ಭಾರತವು 2024 ರ ಫೈನಲ್ ಸೋಲಿಗೆ ಶ್ರೀಲಂಕಾ ವಿರುದ್ಧ ಸೇಡು ತೀರಿಸಿಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us