
ಪಂಜಾಬ್ ವಿರುದ್ಧದ ಮುಂದಿನ ರಣಜಿ ಟ್ರೋಫಿ (Ranji Trophy) ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ವಿಜಯ್ ಹಜಾರೆ ಟ್ರೋಫಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಯಾಂಕ್ ಅಗರ್ವಾಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದ್ದು, ಅವರ ಬದಲಿಗೆ ಯುವ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಇತ್ತೀಚಿಗಷ್ಟೇ ಮುಗಿದ ವಿಜಯ್ ಹಜಾರೆ ಟ್ರೋಫಿಯಲ್ಲಿ ದೇವದತ್ ಪಡಿಕ್ಕಲ್ (Devdutt Padikkal) ಅದ್ಭುತ ಪ್ರದರ್ಶನ ನೀಡಿದ್ದರು. ಅದರ ಫಲವಾಗಿ ಇದೀಗ ಪಡಿಕ್ಕಲ್ಗೆ ತಂಡದ ನಾಯಕತ್ವ ನೀಡಲಾಗಿದೆ. ಇನ್ನೊಂದು ಪ್ರಮುಖ ಸುದ್ದಿಯೆಂದರೆ ಕೆಎಲ್ ರಾಹುಲ್ (KL Rahul) ಕೂಡ ರಣಜಿ ಟ್ರೋಫಿ ಪಂದ್ಯದಲ್ಲಿ ಆಡುವುದನ್ನು ಕಾಣಬಹುದು.
ಮುಂದಿನ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕದ ಪರವಾಗಿ ಕೆಎಲ್ ರಾಹುಲ್ ಆಡಲಿದ್ದಾರೆ. ಈ ಪಂದ್ಯ ಜನವರಿ 29 ರಂದು ಮೊಹಾಲಿಯಲ್ಲಿ ಪಂಜಾಬ್ ವಿರುದ್ಧ ನಡೆಯಲಿದೆ. ರಾಹುಲ್ ಮಾತ್ರವಲ್ಲದೆ, ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ಅನುಭವಿ ಬ್ಯಾಟ್ಸ್ಮನ್ ಕರುಣ್ ನಾಯರ್ ಫಿಟ್ನೆಸ್ ಇಲ್ಲದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಕರುಣ್ ಜೊತೆಗೆ ಅಭಿನವ್ ಮನೋಹರ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಕರ್ನಾಟಕ ರಣಜಿ ತಂಡ: ಮಾಯಂಕ್ ಅಗರ್ವಾಲ್, ಕೆಎಲ್ ರಾಹುಲ್, ಕೆವಿ ಅನೀಶ್, ದೇವದತ್ ಪಡಿಕ್ಕಲ್ (ನಾಯಕ), ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ಕೃತಿಕ್ ಕೃಷ್ಣ, ಎಂ ವೆಂಕಟೇಶ್, ವಿದ್ಯಾದರ್ ಪಾಟೀಲ್, ವಿದ್ವತ್ ಕಾವೇರಪ್ಪ, ಪ್ರಸಿದ್ಧ್ ಕೃಷ್ಣ, ಮೊಹ್ಸಿನ್ ಖಾನ್, ಶಿಖರ್ ಶೆಟ್ಟಿ, ಕೆಎಲ್ ಶ್ರೀಜಿತ್ ಮತ್ತು ಧ್ರುವ ಪ್ರಭಾಕರ್.
ಪಂಜಾಬ್ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕೆ ಕರ್ನಾಟಕ ತಂಡ.
Devdutt Padikkal is named captain. Karun is out with injury.#RanjiTrophy #KarnatakaCricket pic.twitter.com/A6G307wBLx— Karnataka Sports Fans (@karnataka_sport) January 26, 2026
ಪ್ರಸ್ತುತ ರಣಜಿ ಟ್ರೋಫಿ ಆವೃತ್ತಿಯಲ್ಲಿ ಕರ್ನಾಟಕ ತಂಡವು ಗ್ರೂಪ್ ಬಿಯಲ್ಲಿ ಮೂರನೇ ಸ್ಥಾನದಲ್ಲಿದೆ. ತಂಡವು ತನ್ನ ಆರು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದಿದ್ದು, ಒಂದರಲ್ಲಿ ಸೋತಿದ್ದರೆ, ಮೂರರಲ್ಲಿ ಡ್ರಾ ಸಾಧಿಸಿದೆ. ಕರುಣ್ ನಾಯರ್ ಈ ಆವೃತ್ತಿಯಲ್ಲಿ ಕರ್ನಾಟಕ ಪರ ಅತಿ ಹೆಚ್ಚು (614) ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳು ಮತ್ತು ಎರಡು ಅರ್ಧಶತಕಗಳು ಸೇರಿವೆ. ಸ್ಮರಣ್ ರವಿಚಂದ್ರನ್ ಕೂಡ ಆಡಿರುವ ಐದು ಪಂದ್ಯಗಳಲ್ಲಿ 119 ಸರಾಸರಿಯಲ್ಲಿ 595 ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಶತಕಗಳು ಮತ್ತು ಎರಡು ಅರ್ಧಶತಕಗಳು ಸೇರಿವೆ. ಲೆಗ್-ಸ್ಪಿನ್ನರ್ ಶ್ರೇಯಸ್ ಗೋಪಾಲ್ ಕರ್ನಾಟಕ ಪರ ಅತಿ ಹೆಚ್ಚು ವಿಕೆಟ್ (31) ಪಡೆದಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:59 pm, Mon, 26 January 26