ಗೌತಮ್ ಗಂಭೀರ್ ಸಾರಥ್ಯದಲ್ಲಿ ಕೆಎಲ್ ರಾಹುಲ್ ನಾಯಕ

|

Updated on: Jul 11, 2024 | 7:16 AM

India vs Sri Lanka: ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಸರಣಿ ಆಡಲಿದೆ. ಈ ಸರಣಿಯಲ್ಲಿ ಭಾರತ ತಂಡವು ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲಿದೆ. ಇಲ್ಲಿ ಏಕದಿನ ತಂಡದ ನಾಯಕರಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಗೌತಮ್ ಗಂಭೀರ್ ಸಾರಥ್ಯದಲ್ಲಿ ಕೆಎಲ್ ರಾಹುಲ್ ನಾಯಕ
KL Rahul
Follow us on

ಭಾರತ ತಂಡದ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ನೇಮಕವಾಗಿದ್ದಾರೆ. ಈ ನೇಮಕದ ಬೆನ್ನಲ್ಲೇ ಗಂಭೀರ್ ಸಾರಥ್ಯದಲ್ಲಿ ಕೆಎಲ್ ರಾಹುಲ್ (KL Rahul) ನಾಯಕರಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ ಗಂಭೀರ್ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಆದರೆ ಈ ಸರಣಿಗೆ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಲಿದ್ದಾರೆ.

ಈ ಮೂವರು ಆಟಗಾರರು ವಿಶ್ರಾಂತಿ ಬಯಸಿದ್ದು, ಹೀಗಾಗಿ ಲಂಕಾ ವಿರುದ್ಧದ ಸರಣಿಯಿಂದ ಹೊರಗುಳಿಯಲು ಬಯಸಿದ್ದಾರೆ ಎಂದು ತಿಳಿದು ಬಂದಿದೆ. ಅತ್ತ ರೋಹಿತ್ ಶರ್ಮಾ ಹೊರಗುಳಿದರೆ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಸದ್ಯದ ಉತ್ತರ ಕೆಎಲ್ ರಾಹುಲ್.

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಈ ಬಾರಿಯ ಟಿ20 ವಿಶ್ವಕಪ್​ಗೆ ಕೆಎಲ್ ರಾಹುಲ್ ಆಯ್ಕೆಯಾಗಿರಲಿಲ್ಲ. ಇದೀಗ ಕ್ಯಾಪ್ಟನ್ ಆಗಿ ಮತ್ತೆ ಬ್ಲೂ ಜೆರ್ಸಿಯಲ್ಲಿ ಕಣಕ್ಕಿಳಿಯಲು ರಾಹುಲ್ ಸಜ್ಜಾಗಿದ್ದಾರೆ.

ಈ ಹಿಂದೆ ಐಪಿಎಲ್ ನಲ್ಲಿ ಗಂಭೀರ್ – ರಾಹುಲ್ ಜೊತೆಯಾಗಿ ನಿರ್ವಹಿಸಿದ್ದರು. ಐಪಿಎಲ್ 2022-23 ರಲ್ಲಿ ಗಂಭೀರ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದರೆ, ರಾಹುಲ್ ನಾಯಕರಾಗಿ ಕಾಣಿಸಿಕೊಂಡಿದ್ದರು. ಇದೀಗ ಗೌತಮ್ ಗಂಭೀರ್ ಅವರ ಮೊದಲ ಸರಣಿಯಲ್ಲಿ ರಾಹುಲ್ ಅವರು ಭಾರತ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಟಿ20 ತಂಡಕ್ಕೆ ಯಾರು ಕ್ಯಾಪ್ಟನ್?

ಶ್ರೀಲಂಕಾ ವಿರುದ್ಧ ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ20 ಸರಣಿ ಆಡಲಿದೆ. ಇಲ್ಲಿ ರಾಹುಲ್ ಏಕದಿನ ತಂಡವನ್ನು ಮುನ್ನಡೆಸಿದರೆ, ಟಿ20 ತಂಡಕ್ಕೆ ಯಾರು ಕ್ಯಾಪ್ಟನ್ ಆಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿ ಮೂಲಕ ಭಾರತ ತಂಡಕ್ಕೆ ಹೊಸ ನಾಯಕ ಪಾದರ್ಪಣೆ ಮಾಡಲಿದ್ದಾರೆ. ಈ ಹೊಸ ನಾಯಕ ಯಾರೆಂಬ ಪ್ರಶ್ನೆಗೆ ಹಾರ್ದಿಕ್ ಪಾಂಡ್ಯ ಹೆಸರು ಕೇಳಿ ಬರುತ್ತಿದೆ.

ಇದನ್ನೂ ಓದಿ: KL Rahul: ಕೆಎಲ್ ರಾಹುಲ್ RCBಗೆ ನಾಯಕರಾಗ್ತಾರಾ?

ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದ ಉಪನಾಯಕರಾಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯಗೆ ನಾಯಕತ್ವದ ನೀಡಲು ಬಿಸಿಸಿಐ ಬಯಸಿದೆ ಎಂದು ಕೆಲ ವರದಿಗಳು ತಿಳಿಸಿವೆ. ಹೀಗಾಗಿ ಲಂಕಾ ವಿರುದ್ಧದ ಸರಣಿಯ ಮೂಲಕ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾ ಟಿ20 ತಂಡದ ನೂತನ ನಾಯಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

 

Published On - 7:15 am, Thu, 11 July 24