Irani Cup 2024: ಶೇಷ ಭಾರತ ತಂಡ ಪ್ರಕಟ: ಇಬ್ಬರು ಕನ್ನಡಿಗರಿಗೆ ಸ್ಥಾನ

|

Updated on: Sep 25, 2024 | 7:12 AM

Irani Cup 2024: ಇರಾನಿ ಕಪ್​ನಲ್ಲಿ ಹಾಲಿ ರಣಜಿ ಚಾಂಪಿಯನ್ ತಂಡ ಹಾಗೂ ಶೇಷ ಭಾರತ ತಂಡ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತದೆ. ಅಂದರೆ ಇಲ್ಲಿ ಶೇಷ ಭಾರತ ತಂಡದಲ್ಲಿ ರಣಜಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಬಿಸಿಸಿಐ ಆಯ್ಕೆ ಮಾಡುತ್ತದೆ.

Irani Cup 2024: ಶೇಷ ಭಾರತ ತಂಡ ಪ್ರಕಟ: ಇಬ್ಬರು ಕನ್ನಡಿಗರಿಗೆ ಸ್ಥಾನ
ಸಾಂದರ್ಭಿಕ ಚಿತ್ರ
Follow us on

ಅಕ್ಟೋಬರ್ 1 ರಿಂದ ಶುರುವಾಗಲಿರುವ ಇರಾನಿ ಕಪ್​ ಟೂರ್ನಿಗೆ ಶೇಷ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಹಾಗೂ ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದಾರೆ. ಇಲ್ಲಿ ಪಡಿಕ್ಕಲ್ ಬ್ಯಾಟರ್ ಆಗಿ ಆಯ್ಕೆಯಾದರೆ, ಪ್ರಸಿದ್ಧ್ ಕೃಷ್ಣ ವೇಗಿಯಾಗಿ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ. ಹಾಗೆಯೇ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಯಶ್ ದಯಾಳ್ ಹಾಗೂ ಧ್ರುವ್ ಜುರೇಲ್ ಅವರನ್ನು ಸಹ ಶೇಷ ಭಾರತ ತಂಡದಲ್ಲಿ ಹೆಸರಿಸಲಾಗಿದೆ. ಹೀಗಾಗಿ ಈ ಇಬ್ಬರು ಆಟಗಾರರು ಇರಾನಿ ಕಪ್​ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ 2024ರ ಇರಾನಿ ಕಪ್​ಗೆ ಹೆಸರಿಸಲಾದ ಶೇಷ ಭಾರತ ತಂಡ ಈ ಕೆಳಗಿನಂತಿದೆ…

ಶೇಷ ಭಾರತ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಅಭಿಮನ್ಯು ಈಶ್ವರನ್ (ಉಪನಾಯಕ), ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೇಲ್ (ವಿಕೆಟ್ ಕೀಪರ್)*, ಇಶಾನ್ ಕಿಶನ್ (ವಿಕೆಟ್ ಕೀಪರ್), ಮಾನವ್ ಸುತಾರ್, ಸರನ್ಶ್ ಜೈನ್, ಪ್ರಸಿದ್ಧ್ ಕೃಷ್ಣ, ಮುಕೇಶ್ ಕುಮಾರ್, ಯಶ್ ದಯಾಲ್*, ರಿಕಿ ಭುಯಿ, ಶಾಶ್ವತ್ ರಾವತ್, ಖಲೀಲ್ ಅಹ್ಮದ್, ರಾಹುಲ್ ಚಹರ್.

ಏನಿದು ಇರಾನಿ ಕಪ್?

ಝಡ್​.ಆರ್​ ಇರಾನಿ ಅಥವಾ ಝಲ್ ಇರಾನಿ, ಇವರು ಬಿಸಿಸಿಐನ ಮಾಜಿ ಅಧ್ಯಕ್ಷರು. ಲಂಡನ್‌ನಲ್ಲಿ ಚಾರ್ಟರ್ಡ್ ಅಕೌಂಟೆನ್ಸಿ ಅಧ್ಯಯನ ಮಾಡಿದ್ದ ಇರಾನಿ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ದೆಹಲಿಯ ರೋಶನಾರಾ ಕ್ಲಬ್ ಮತ್ತು ಮುಂಬೈನ ಪಾರ್ಸಿ ಜಿಮ್ಖಾನಾ ಕ್ಲಬ್ ಪರ ಕ್ರಿಕೆಟ್ ಆಡುತ್ತಿದ್ದರು. ಅಷ್ಟೇ ಅಲ್ಲದೆ 1928-29 ರಿಂದ 1945-46 ಮತ್ತು 1948-49 ರಿಂದ 1961-62 ಅವರು ಭಾರತ ಕ್ರಿಕೆಟ್ ಮಂಡಳಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು.

1966 ರಲ್ಲಿ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಇರಾನಿ ಅವರು ಭಾರತೀಯ ಕ್ರಿಕೆಟ್​ ಅನ್ನು ಪ್ರಗತಿಪಥದತ್ತ ಸಾಗಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಮೂಲಕ ಸ್ವಾತಂತ್ರ ಭಾರತದಲ್ಲಿ ಕ್ರಿಕೆಟ್ ಅನ್ನು ಉತ್ತೇಜಿಸುವಲ್ಲಿ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಅವರ ಸ್ಮರಾರ್ಥ ಇರಾನಿ ಕಪ್​ ಅನ್ನು ಆಯೋಜಿಸಲಾಗುತ್ತದೆ.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 8 ಆಟಗಾರರು ನಿವೃತ್ತಿ..!

ವಿಶೇಷ ಎಂದರೆ ಇರಾನಿ ಕಪ್​ನಲ್ಲಿ ಹಾಲಿ ರಣಜಿ ಚಾಂಪಿಯನ್ ತಂಡ ಹಾಗೂ ಶೇಷ ಭಾರತ ತಂಡ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತದೆ. ಅಂದರೆ ಇಲ್ಲಿ ಶೇಷ ಭಾರತ ತಂಡದಲ್ಲಿ ರಣಜಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಬಿಸಿಸಿಐ ಆಯ್ಕೆ ಮಾಡುತ್ತದೆ. ಅದರಂತೆ ಇದೀಗ ಶೇಷ ಭಾರತ ತಂಡವನ್ನು ಹೆಸರಿಸಲಾಗಿದ್ದು, ಈ ತಂಡವು ಅಕ್ಟೋಬರ್ 1 ರಿಂದ ಶುರುವಾಗಲಿರುವ ಇರಾನಿ ಟ್ರೋಫಿ ಪಂದ್ಯದಲ್ಲಿ ರಣಜಿ ಟೂರ್ನಿಯ ಹಾಲಿ ಚಾಂಪಿಯನ್ ಮುಂಬೈ ತಂಡವನ್ನು ಎದುರಿಸಲಿದೆ.