ಶ್ರೇಯಸ್ ಅಯ್ಯರ್ ಆರೋಗ್ಯ ಹೇಗಿದೆ? ಸಿಡ್ನಿಯಿಂದ ಹೊರಬಿತ್ತು ಸಮಾಧಾನಕರ ಸುದ್ದಿ

Shreyas Iyer Injury Update: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತದ ಕ್ರಿಕೆಟ್ ಆಟಗಾರ ಶ್ರೇಯಸ್ ಅಯ್ಯರ್ ಅವರನ್ನು ಐಸಿಯುನಿಂದ ಜನರಲ್ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಎಡ ಪಕ್ಕೆಲುಬಿನ ಕೆಳಭಾಗದಲ್ಲಿ ಆಂತರಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಅಯ್ಯರ್ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಅವರ ಆರೋಗ್ಯವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

ಶ್ರೇಯಸ್ ಅಯ್ಯರ್ ಆರೋಗ್ಯ ಹೇಗಿದೆ? ಸಿಡ್ನಿಯಿಂದ ಹೊರಬಿತ್ತು ಸಮಾಧಾನಕರ ಸುದ್ದಿ
Shreyas Iyer

Updated on: Oct 27, 2025 | 8:49 PM

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ (Shreyas Iyer) ಕ್ಯಾಚ್ ಹಿಡಿಯುವ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇದರಿಂದಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದ ಅಯ್ಯರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಯ್ಯರ್ ಅವರ ಗಾಯ ಎಷ್ಟು ಗಂಭೀರವಾಗಿತ್ತೆಂದರೆ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದರಿಂದ ಭಾರತ ಕ್ರಿಕೆಟ್​ನಲ್ಲಿ ಒಂದು ರೀತಿಯ ಆತಂಕದ ವಾತಾವರಣ ಮನೆ ಮಾಡಿತ್ತು. ಇದೀಗ ಶ್ರೇಯಸ್ ಅಯ್ಯರ್ ಅವರ ಗಾಯದ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಅವರನ್ನು ಐಸಿಯುನಿಂದ ಜನರಲ್ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ.

ಐಸಿಯುನಿಂದ ವಾರ್ಡ್​ಗೆ ಶಿಫ್ಟ್

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಶ್ರೇಯಸ್ ಅಯ್ಯರ್ ಅವರ ಸ್ಥಿತಿ ಗಂಭೀರವಾಗಿದೆಯಾದರೂ ಅವರ ಆರೋಗ್ಯ ಸ್ಥಿರವಾಗಿದೆ. ಅಯ್ಯರ್ ಅವರ ಸ್ಥಿತಿ ಸುಧಾರಿಸುತ್ತಿದ್ದು, ಅವರನ್ನು ಈಗ ಐಸಿಯುನಿಂದ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಆದಾಗ್ಯೂ ಸಿಡ್ನಿಯಲ್ಲಿಯೇ ಬಿಡುಬಿಟ್ಟಿರುವ ಬಿಸಿಸಿಐ ವೈದ್ಯಕೀಯ ತಂಡವು ಶ್ರೇಯಸ್ ಅವರ ಗಾಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ವರದಿಗಳ ಪ್ರಕಾರ, ಅಯ್ಯರ್ ಅಪಾಯದಿಂದ ಪಾರಾಗಿದ್ದು, ಅವರ ಕೆಲವು ಸ್ನೇಹಿತರು ಅವರೊಂದಿಗೆ ಆಸ್ಪತ್ರೆಯಲ್ಲಿ ಇದ್ದಾರೆ. ಇದಲ್ಲದೆ, ವೀಸಾ ಔಪಚಾರಿಕತೆಗಳು ಪೂರ್ಣಗೊಂಡ ನಂತರ ಕುಟುಂಬದ ಸದಸ್ಯರು ಮುಂಬೈನಿಂದ ಸಿಡ್ನಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಸಧ್ಯಕ್ಕೆ ಸಿಕ್ಕಿರುವ ಮಾಹಿತಿಯ ಪ್ರಕಾರ ಅಯ್ಯರ್ ಸಂಪೂರ್ಣವಾಗಿ ಚೇತರಿಸಿಕೊಳ್ಳುವವರೆಗೆ ಸಿಡ್ನಿಯಲ್ಲಿಯೇ ಇರಲಿದ್ದು, ಇನ್ನೂ ಕೆಲವು ದಿನಗಳವರೆಗೆ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ.

IND vs AUS: ಸೂಪರ್​ಮ್ಯಾನ್ ಶ್ರೇಯಸ್; ಕ್ಯಾಚ್ ಹಿಡಿದು ನೋವಿನಿಂದ ನರಳಾಡಿದ ಅಯ್ಯರ್

ಗಾಯದ ಬಗ್ಗೆ ಬಿಸಿಸಿಐ ಮಾಹಿತಿ

ಇದಕ್ಕೂ ಮುನ್ನ, ಬಿಸಿಸಿಐ ಅಯ್ಯರ್ ಗಾಯದ ಕುರಿತು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿತು. ಅಕ್ಟೋಬರ್ 25, 2025 ರಂದು ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬಿನ ಕೆಳಭಾಗಕ್ಕೆ ಗಂಭೀರ ಗಾಯವಾಗಿತ್ತು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸ್ಕ್ಯಾನಿಂಗ್​ಗೆ ಒಳಪಡಿಸಿದ ಬಳಿಕ ಎಡ ಪಕ್ಕೆಲುಬಿನ ಕೆಳಭಾಗದಲ್ಲಿ ಆಂತರಿಕ ರಕ್ತಸ್ರಾವವಾಗಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಸಿಡ್ನಿಯಲ್ಲಿರುವ ತಜ್ಞ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ. ಭಾರತೀಯ ತಂಡದ ವೈದ್ಯರು ಶ್ರೇಯಸ್ ಅವರ ದೈನಂದಿನ ಪ್ರಗತಿಯನ್ನು ನಿರ್ಣಯಿಸಲು ಸಿಡ್ನಿಯಲ್ಲಿ ಅವರೊಂದಿಗೆ ಇರುತ್ತಾರೆ ಎಂದಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ