ಭರ್ಜರಿ ಸೆಂಚುರಿ ಸಿಡಿಸಿದ ರುತುರಾಜ್ ಗಾಯಕ್ವಾಡ್

India A vs Sri Lanka A: ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ತಂಡಗಳ ನಡುವಿನ ಏಕದಿನ ತ್ರಿಕೋನ ಸರಣಿಯು ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಎ ಮತ್ತು ಶ್ರೀಲಂಕಾ ಎ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗ ರುತುರಾಜ್ ಗಾಯಕ್ವಾಡ್ ಆರ್ಕಷಕ ಶತಕ ಬಾರಿಸಿ ಮಿಂಚಿದ್ದಾರೆ.

ಭರ್ಜರಿ ಸೆಂಚುರಿ ಸಿಡಿಸಿದ ರುತುರಾಜ್ ಗಾಯಕ್ವಾಡ್
Ruturaj Gaikwad

Updated on: Jun 09, 2026 | 2:26 PM

ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ 12 ರನ್​ಗಳಿಸಿ ಔಟಾದರೆ, ಪ್ರಭ್​ಸಿಮ್ರಾನ್ ಸಿಂಗ್ 2 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪ್ರಿಯಾಂಶ್ ಆರ್ಯಾ 32 ರನ್​ಗಳ ಕೊಡುಗೆ ನೀಡಿದರು.

ಈ ಹಂತದಲ್ಲಿ ಜೊತೆಗೂಡಿದ ರುತುರಾಜ್ ಗಾಯಕ್ವಾಡ್ ಹಾಗೂ ತಿಲಕ್ ವರ್ಮಾ ಅತ್ಯುತ್ತಮ ಜೊತೆಯಾಟ ಪ್ರದರ್ಶಿಸಿದರು. 13ನೇ ಓವರ್​ನಲ್ಲಿ ಜೊತೆಗೂಡಿದ ಈ ಜೋಡಿಯು 42 ಓವರ್​ಗಳ ಮುಕ್ತಾಯದ ವೇಳೆಗೆ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು.

ಇನ್ನು ಕೊನೆಯ 8 ಓವರ್​ಗಳಿರುವಾಗ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ರುತುರಾಜ್ ಗಾಯಕ್ವಾಡ್ 112 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಸೆಂಚುರಿ ಬೆನ್ನಲ್ಲೇ ವನುಜಾ ಸಹನ್ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿ ಔಟಾದರು.

ಔಟಾಗುವ ಮುನ್ನ 114 ಎಸೆತಗಳನ್ನು ಎದುರಿಸಿದ ರುತುರಾಜ್ ಗಾಯಕ್ವಾಡ್ 3 ಭರ್ಜರಿ ಸಿಕ್ಸರ್ ಹಾಗೂ 6 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು. ಇನ್ನು ರುತುರಾಜ್ ನಿರ್ಗಮನದ ಬೆನ್ನಲ್ಲೇ ತಿಲಕ್ ವರ್ಮಾ (60) ಕೂಡ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಆಯುಷ್ ಬದೋನಿ 24 ರನ್ ಬಾರಿಸಿದರೆ, ಸೂರ್ಯವಂಶಿ ಶೆಡ್ಗೆ 26 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಭಾರತ ಎ ತಂಡ 50 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 277 ರನ್ ಕಲೆಹಾಕಿದೆ.

ಭಾರತ ‘ಎ’ ಪ್ಲೇಯಿಂಗ್ XI: ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ತಿಲಕ್ ವರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಆಯುಷ್ ಬದೋನಿ, ಅನ್ಕುಲ್ ರಾಯ್, ಸೂರ್ಯಂಶ್ ಶೆಡ್ಗೆ, ಅನ್ಶುಲ್ ಕಂಬೋಜ್, ಅರ್ಷಾದ್ ಖಾನ್, ವಿಪ್ರಾಜ್ ನಿಗಮ್.

ಇದನ್ನೂ ಓದಿ: ಅನ್​ಫಿಟ್​… ವಿರಾಟ್ ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ?

ಶ್ರೀಲಂಕಾ ‘ಎ’ ಪ್ಲೇಯಿಂಗ್ XI: ನಿರೋಷನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಅವಿಷ್ಕ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಸದೀರ ಸಮರವಿಕ್ರಮ, ಸಹನ್ ಅರಾಚಿಂಗೆ (ನಾಯಕ), ಚಾಮಿಕ ಕರುಣಾರತ್ನೆ, ರವಿಂದು ಫೆರ್ನಾಂಡೋ, ವನುಜಾ ಸಹನ್, ವಿಜಯಕಾಂತ್ ವಿಯಾಸ್ಕಾಂತ್, ಮೊಹಮ್ಮದ್ ಶಿರಾಜ್, ಗರುಕ ಸಂಕೇತ್.

 

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us