
ಫೆಬ್ರವರಿ 15 ಕ್ಕೆ ನಿಗದಿಯಾಗಿರುವ ಟಿ20 ವಿಶ್ವಕಪ್ನ 27ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುಬುದು ಖಚಿತವಾಗಿದೆ. ಇದಕ್ಕೂ ಮುನ್ನ ಈ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿಕೊಂಡಿತ್ತು. ಇದೀಗ ಪಿಸಿಬಿಯ ಮನವೊಲಿಸುವಲ್ಲಿ ಐಸಿಸಿ ಯಶಸ್ವಿಯಾಗಿದ್ದು, ಅದರಂತೆ ಫೆ.15 ರಂದು ಉಭಯ ತಂಡಗಳು ಕಣಕ್ಕಿಳಿಯಲಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.
ಟಿ20 ವಿಶ್ವಕಪ್ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ತಿಳಿಸಿತ್ತು. ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರ ಮಾಡಬೇಕೆಂದು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಆಗ್ರಹಿಸಿತ್ತು.
ಆದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ನ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಅಲ್ಲದೆ ಬಾಂಗ್ಲಾ ತಂಡವು ಭಾರತದಲ್ಲೇ ಆಡಬೇಕೆಂದು ಸೂಚಿಸಿದ್ದರು. ಐಸಿಸಿಯ ಈ ಸೂಚನೆಯನ್ನು ತಿರಸ್ಕರಿಸಿದ್ದರಿಂದ ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್ನಿಂದ ಕೈ ಬಿಡಲಾಯಿತು.
ಇತ್ತ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವ ಐಸಿಸಿ ಹಾಗೂ ಬಿಸಿಸಿಐ ಕ್ರಮಕ್ಕೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಈ ನಡೆಯನ್ನು ಖಂಡಿಸುವ ಸಲುವಾಗಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಿಸಿಬಿ ತಿಳಿಸಿತ್ತು.
ಇತ್ತ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯದೇ ಇದ್ದರೆ ಐಸಿಸಿ ಆದಾಯಕ್ಕೆ ಆರ್ಥಿಕ ನಷ್ಟ ಉಂಟಾಗಲಿದೆ. ಹೀಗಾಗಿ ಇದೀಗ ಐಸಿಸಿ ಅಧಿಕಾರಿಗಳು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಮನವೊಲಿಸುವ ಕಾಯಕಕ್ಕೆ ಕೈ ಹಾಕಿದ್ದರು. ಅದರಂತೆ ಇದೀಗ ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡುವ ಮೂಲಕ ಐಸಿಸಿ ಪಿಸಿಬಿಯ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದರೊಂದಿಗೆ ಫೆಬ್ರವರಿ 15 ರಂದು ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವು ನಡೆಯುವುದು ಖಚಿತವಾಗಿದೆ. ಅದರಂತೆ ಮುಂದಿನ ಭಾನುವಾರ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಇಂಡೊ-ಪಾಕ್ ಮುಖಾಮುಖಿಯಾಗಲಿದ್ದು, ಈ ಮ್ಯಾಚ್ನಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೂಪರ್-8 ಹಂತಕ್ಕೇರುವುದು ಬಹುತೇಕ ಖಚಿತವಾಗಲಿದೆ.
ಇದನ್ನೂ ಓದಿ: ಮುಂದಿನ ವಿಶ್ವಕಪ್ನಲ್ಲಿ ವೈಭವ್ ಸೂರ್ಯವಂಶಿಗೆ ಇಲ್ಲ ಅವಕಾಶ..!
ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ನೆದರ್ಲೆಂಡ್ಸ್ ವಿರುದ್ಧ ಆಡಬೇಕಿದೆ. ಹೀಗಾಗಿ ಈ ಮ್ಯಾಚ್ಗೂ ಮುನ್ನ ಭಾರತ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸುವುದು ಬಹುತೇಕ ಖಚಿತವಾಗಲಿದೆ.