ಮೂವರ ಕಂಬ್ಯಾಕ್; ಟೆಸ್ಟ್ ಸರಣಿ ನಡುವೆ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ
Team India Boost: ಗಾಯದಿಂದ ಚೇತರಿಸಿಕೊಂಡಿರುವ ಟೀಂ ಇಂಡಿಯಾದ ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಮತ್ತು ಹರ್ಷಿತ್ ರಾಣಾ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಫಿಟ್ನೆಸ್ ಮೇಲೆ ಕೆಲಸ ಮಾಡುತ್ತಿರುವ ಈ ಮೂವರು, ಮುಂಬರುವ ವೆಸ್ಟ್ ಇಂಡೀಸ್ ಸರಣಿ ಮತ್ತು ಏಷ್ಯನ್ ಗೇಮ್ಸ್ಗೆ ತಂಡಕ್ಕೆ ಬಲ ನೀಡಲಿದ್ದಾರೆ. ಇದು 2027ರ ವಿಶ್ವಕಪ್ಗೆ ತಂಡದ ಸಿದ್ಧತೆಗೆ ಮತ್ತಷ್ಟು ಬಲ ತುಂಬಲಿದೆ.

ಶ್ರೀಲಂಕಾದಲ್ಲಿ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾಕ್ಕೆ (Team India) ಸಿಹಿ ಸುದ್ದಿ ಸಿಕ್ಕಿದೆ. ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿದಿರುವ ತಂಡದ ಮೂವರು ಸ್ಟಾರ್ ಆಟಗಾರರು ಗಾಯದಿಂದ ಚೇತರಿಸಿಕೊಂಡಿದ್ದು, ತಂಡಕ್ಕೆ ಸೇರಿಕೊಳ್ಳಲು ಸಿದ್ಧರಾಗಿದ್ದಾರೆ. ಈ ಮೂವರು ಆಟಗಾರರಲ್ಲಿ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah), ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಮತ್ತು ಯುವ ವೇಗಿ ಹರ್ಷಿತ್ ರಾಣಾ ಸೇರಿದ್ದು, ಈ ಮೂವರು ಪ್ರಸ್ತುತ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ತಮ್ಮ ಫಿಟ್ನೆಸ್ ಮೇಲೆ ಕೆಲಸ ಮಾಡುತ್ತಿದ್ದಾರೆ. ಹರ್ಷಿತ್ ರಾಣಾ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬುಮ್ರಾ ಮತ್ತು ಹಾರ್ದಿಕ್ ಅವರೊಂದಿಗೆ ಜಿಮ್ನಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ ತಂಡಕ್ಕೆ ಮರಳಲು ನಾವು ಸಿದ್ಧ ಎಂಬ ಸೂಚನೆ ನೀಡಿದ್ದಾರೆ.
ಇಷ್ಟರಲ್ಲೇ ಮೂವರ ಕಂಬ್ಯಾಕ್
ವರದಿ ಪ್ರಕಾರ, ಬುಮ್ರಾ ಈಗಾಗಲೇ ತಮ್ಮ ಫಿಟ್ನೆಸ್ ಪರೀಕ್ಷೆಗಳನ್ನು ಪೂರ್ಣಗೊಳಿಸಿದ್ದಾರೆ. ಆದಾಗ್ಯೂ ಅವರ ದೀರ್ಘಕಾಲೀನ ಫಿಟ್ನೆಸ್ ಅನ್ನು ಗಮನದಲ್ಲಿಟ್ಟುಕೊಂಡು ಅವರ ಕೆಲಸದ ಹೊರೆಯನ್ನು ಎಚ್ಚರಿಕೆಯಿಂದ ನಿರ್ವಹಿಸಲಾಗುತ್ತಿದೆ. ಹೀಗಾಗಿ 2027 ರ ಏಕದಿನ ವಿಶ್ವಕಪ್ಗೆ ಬುಮ್ರಾರನ್ನು ಸಿದ್ಧರಾಗಿಸಲು ಮ್ಯಾನೇಜ್ಮೆಂಟ್ ಅವರ ಮೇಲೆ ಹೆಚ್ಚು ನಿಗಾವಹಿಸಿದೆ. ಇತ್ತ ಹಾರ್ದಿಕ್ ಪಾಂಡ್ಯ ಪ್ರಸ್ತುತ ಕ್ವಾಡ್ರೈಸ್ಪ್ಸ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಅವರು ಸಂಪೂರ್ಣ ಫಿಟ್ನೆಸ್ ಪಡೆದ ನಂತರವೇ ವೈಟ್-ಬಾಲ್ ಸರಣಿಗೆ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ಚಿಂತಿಸಿದೆ. ಇದರರ್ಥ ಈ ಇಬ್ಬರು ಆಟಗಾರರು ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವುದು ಖಚಿತವಾಗಿದೆ.
HARDIK X BUMRAH X HARSHIT 🥶
– Hardik Pandya, Jasprit Bumrah and Harshit Rana preparing for Asian Games.🇮🇳 pic.twitter.com/bHDm0PFpFk
— Cricket Central (@CricketCentrl) August 25, 2026
ಏಷ್ಯನ್ ಕ್ರೀಡಾಕೂಟದಲ್ಲಿ ಕಣಕ್ಕೆ
ಇನ್ನು ಕಳೆದ ಫೆಬ್ರವರಿಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವ ವೇಗಿ ಹರ್ಷಿತ್ ರಾಣಾ ಆ ನಂತರ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಈ ಕಾರಣದಿಂದಾಗಿ ತಂಡದಿಂದ ಹೊರಗುಳಿದಿರುವ ಹರ್ಷಿತ್ ರಾಣಾ ಕೂಡ ಚೇತರಿಕೆಯ ಹಾದಿಯಲ್ಲಿದ್ದು, ಇಷ್ಟರಲ್ಲೇ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇದರ ಜೊತೆಗೆ ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಹಾಗೂ ಹರ್ಷಿತ್ ರಾಣಾರನ್ನು ಜಪಾನ್ನಲ್ಲಿ ನಡೆಯಲಿರುವ ಏಷ್ಯನ್ ಕ್ರೀಡಾಕೂಟಕ್ಕೆ ಭಾರತ ತಂಡದಲ್ಲಿ ಆಯ್ಕೆ ಮಾಡಲಾಗಿದ್ದು, ಈ ಕ್ರೀಡಾಕೂಟದಲ್ಲಿ ಇವರಿಬ್ಬರ ಲಭ್ಯತೆ ತಂಡದ ಬಲವನ್ನು ಹೆಚ್ಚಿಸಲಿದೆ.
ಸದ್ಯದ ಮಾಹಿತಿ ಪ್ರಕಾರ ಹಾರ್ದಿಕ್ ಪಾಂಡ್ಯ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವ ನಿರೀಕ್ಷೆಯಿದೆ. ಕಳೆದ ಮಾರ್ಚ್ನಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಸರಣಿಯ ನಂತರ ಹಾರ್ದಿಕ್ ಪಾಂಡ್ಯ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಪಾಂಡ್ಯ ಆಗಮನದಿಂದ ತಂಡದ ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಭಾಗಕ್ಕೆ ಬಲ ಬರಲಿದೆ. ಇದು 2027 ರ ಏಕದಿನ ವಿಶ್ವಕಪ್ಗೆ ತಯಾರಿಯಲ್ಲಿರುವ ಟೀಂ ಇಂಡಿಯಾಕ್ಕೆ ಮತ್ತಷ್ಟು ಬಲ ನೀಡಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:14 pm, Wed, 26 August 26




