
ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಕರ್ನಾಟಕ ತಂಡ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಇಂದು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪುದುಚೇರಿ ವಿರುದ್ಧದ ಪಂದ್ಯವನ್ನು ಕರ್ನಾಟಕ 3 ವಿಕೆಟ್ಗಳಿಂದ ಗೆದ್ದುಕೊಂಡಿದೆ. ಇದಕ್ಕೂ ಮುನ್ನ ಟೂರ್ನಿಯಲ್ಲಿ ಬಲಿಷ್ಠ ಮುಂಬೈ ವಿರುದ್ಧ ತನ್ನ ಮೊದಲ ಪಂದ್ಯವನ್ನಾಡಿದ್ದ ಕರ್ನಾಟಕ ಆ ಪಂದ್ಯದಲ್ಲೂ 382 ರನ್ಗಳ ಬೃಹತ್ ಗುರಿಯನ್ನು 46.2 ಓವರ್ಗಳಲ್ಲೇ ಬೆನ್ನಟ್ಟಿ ಅಮೋಘ ಗೆಲುವು ದಾಖಲಿಸಿತ್ತು.
ತನ್ನ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಪುದುಚೇರಿ ತಂಡ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ಪರ ಮಧ್ಯಮ ಕ್ರಮಾಂಕದಲ್ಲಿ ಮಿಂಚಿದ ನಾಯಕ ಅರುಣ್ ಕಾರ್ತಿಕ್ 71 ರನ್ಗಳ ಇನ್ನಿಂಗ್ಸ್ ಆಡಿದರೆ, ಇವರಿಗೆ ಸಾಥ್ ನೀಡಿದ ಅಮನ್ ಹಕೀಮ್ ಖಾನ್ ಕೂಡ 45 ರನ್ಗಳ ಕಾಣಿಕೆ ನೀಡಿದರು. ಈ ಇಬ್ಬರನ್ನು ಹೊರತುಪಡಿಸಿ ತಂಡದ ಉಳಿದ ಬ್ಯಾಟ್ಸ್ಮನ್ಗಳಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ.
ಇತ್ತ ಕರ್ನಾಟಕ ಪರ ಬೌಲಿಂಗ್ನಲ್ಲಿ ಮಿಂಚಿದ ವಿದ್ಯಾಧರ ಪಾಟೀಲ್ 10 ಓವರ್ಗಳಲ್ಲಿ 27 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರೆ, ಶ್ರೇಯಸ್ ಗೋಪಾಲ್ ಕೂಡ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಉಳಿದಂತೆ ಕೌಶಿಕ್ ಹಾಗೂ ವೈಶಾಕ್ ವಿಜಯ್ಕುಮಾರ್ ತಲಾ ಒಂದೊಂದು ವಿಕೆಟ್ ಉರುಳಿಸಿದರು.
ಇನ್ನು ಪುದುಚೇರಿ ನೀಡಿದ 211 ರನ್ಗಳ ಗುರಿ ಬೆನ್ನಟ್ಟಿದ ಕರ್ನಾಟಕಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡ ಕೇವಲ 16 ರನ್ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ನಿಖಿನ್ ಜೋಶ್ 10 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು. ನಾಯಕ ಮಯಾಂಕ್ ಕೂಡ 18 ರನ್ಗಳಿಗೆ ಸುಸ್ತಾದರು. ಮೂರನೇ ಕ್ರಮಾಂಕದಲ್ಲಿ ಬಂದ ಅನೀಶ್ ಕೂಡ 15 ರನ್ಗಳಿಗೆ ಸುಸ್ತಾದರು. ಆದರೆ 4ನೇ ಕ್ರಮಾಂಕದಲ್ಲಿ ಬಂದ ಸ್ಮರಣ್ ರವಿಚಂದ್ರನ್ ತಂಡದ ಪರ ಸ್ಮರಣೀಯ ಇನ್ನಿಂಗ್ಸ್ ಆಡಿದರು.
ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಸ್ಮರಣ್ ಅಜೇಯ ಶತಕ ಸಿಡಿಸಿದಲ್ಲದೆ ತಂಡವನ್ನು ಜಯದ ದಡ ಸೇರಿಸಿದರು. ತಮ್ಮ ಇನ್ನಿಂಗ್ಸ್ನಲ್ಲಿ 87 ಎಸೆತಗಳನ್ನು ಎದುರಿಸಿದ ಸ್ಮರಣ್ 10 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ಗಳ ನೆರವಿನಿಂದ ಅಜೇಯ 100 ರನ್ ಕಲೆಹಾಕಿದರು. ಸ್ಮರಣ್ಗೆ ಸಾಥ್ ನೀಡಿದ ಆಲ್ರೌಂಡರ್ ಶ್ರೇಯಸ್ ಗೋಪಾಲ್ ಕೂಡ 40 ರನ್ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಹೀಗಾಗಿ ತಂಡ 7 ವಿಕೆಟ್ ಕಳೆದುಕೊಂಡು 40.5 ನೇ ಓವರ್ನಲ್ಲಿ ಜಯದ ನಗೆ ಬೀರಿತು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ