
ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರರು ಹಸಿರು ಪಟ್ಟಿ ಧರಿಸಿ ಕಣಕ್ಕಿಳಿದಿದ್ದರು. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಟಾಸ್ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಇಂಗ್ಲೆಂಡ್ ಕ್ಯಾಪ್ಟನ್ ಜೋಸ್ ಬಟ್ಲರ್ ಹಸಿರು ತೋಳುಪಟ್ಟಿ ಧರಿಸಿದ್ದರು.
ಇದಾದ ಬಳಿಕ ಬ್ಯಾಟಿಂಗ್ಗೆ ಇಳಿದ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಸೇರಿದಂತೆ ಕೆಲ ಆಟಗಾರರು ಹಸಿರು ಪಟ್ಟಿಯೊಂದಿಗೆ ಕಣಕ್ಕಿಳಿದಿದ್ದರು. ಅತ್ತ ಇಂಗ್ಲೆಂಡ್ ತಂಡದ ಕೆಲ ಆಟಗಾರರು ಸಹ ಫೀಲ್ಡಿಂಗ್ ಹಾಗೂ ಬ್ಯಾಟಿಂಗ್ ವೇಳೆ ಗ್ರೀನ್ ಆರ್ಮ್ಬ್ಯಾಂಡ್ ಧರಿಸಿದ್ದರು.
ಸಾಮಾನ್ಯವಾಗಿ ಸೂತಕದ ಅಥವಾ ಶ್ರದ್ಧಾಂಜಲಿಯ ಸಲುವಾಗಿ ಆಟಗಾರರು ಕಪ್ಪು ತೋಳು ಪಟ್ಟಿ ಧರಿಸಿ ಕಣಕ್ಕಿಳಿಯುತ್ತಾರೆ. ಆದರೆ ಈ ಬಾರಿ ಹಸಿರು ಪಟ್ಟಿಯೊಂದಿಗೆ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.
ಇದಕ್ಕೆ ಮುಖ್ಯ ಕಾರಣ ಬಿಸಿಸಿಐನ “ಅಂಗಾಂಗ ದಾನ, ಜೀವ ಉಳಿಸಿ” ಅಭಿಯಾನ. ಈ ಅಭಿಯಾನವನ್ನು ಬೆಂಬಲಿಸುವ ಸಲುವಾಗಿ ಉಭಯ ತಂಡಗಳ ಆಟಗಾರರು ಗ್ರೀನ್ ಆರ್ಮ್ ಬ್ಯಾಂಡ್ ಧರಿಸಿ ಕಣಕ್ಕಿಳಿದಿದ್ದಾರೆ. ಈ ಮೂಲಕ ಅಂಗಾಂಗ ದಾನದ ಮಹತ್ವವನ್ನು ಸಾರಿ ಹೇಳಿದ್ದಾರೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್ (112) ಶತಕ ಸಿಡಿಸಿದರೆ, ವಿರಾಟ್ ಕೊಹ್ಲಿ (52) ಅರ್ಧಶತಕ ಬಾರಿಸಿದರು.
ಇನ್ನು ಶ್ರೇಯಸ್ ಅಯ್ಯರ್ 78 ರನ್ ಸಿಡಿಸಿ ಮಿಂಚಿದರು. ಹಾಗೆಯೇ ಕೆಎಲ್ ರಾಹುಲ್ 40 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಟೀಮ್ ಇಂಡಿಯಾ 50 ಓವರ್ಗಳಲ್ಲಿ 356 ರನ್ ಕಲೆಹಾಕಿತು.
357 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು ಕೇವಲ 214 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 142 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು ಭಾರತ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.
ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಟಾಮ್ ಬ್ಯಾಂಟನ್, ಲಿಯಾಮ್ ಲಿವಿಂಗ್ಸ್ಟೋನ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್.
ಇದನ್ನೂ ಓದಿ: ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆ… ಆದರೆ
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.