ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಉತ್ತರ ಪ್ರದೇಶದ ವೃಂದಾವನದ ಯಮುನಾ ನದಿಯಲ್ಲಿ ದೋಣಿ ಮುಳುಗಿ 10 ಮಂದಿ ಸಾವನ್ನಪ್ಪಿದ್ದಾರೆ. ಡಜನ್ಗಟ್ಟಲೆ ಜನರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವೃಂದಾವನದ ಯಮುನಾ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, ಬೋಟ್ನಲ್ಲಿ ಸುಮಾರು 25 ಜನರಿದ್ದರು. ಶೃಂಗಾರ್ ಘಾಟ್ ಬಳಿ ನಡೆದ ಈ ಅಪಘಾತದಲ್ಲಿ ಹಲವಾರು ಜನರು ಮುಳುಗಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
ಮಥುರಾ, ಏಪ್ರಿಲ್ 10: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ (Yamuna River) ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿದ ಪರಿಣಾಮವಾಗಿ 10 ಜನರು ಸಾವನ್ನಪ್ಪಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ. ಪಂಜಾಬ್ನ ಲುಧಿಯಾನದ ಸುಮಾರು 25 ಭಕ್ತರು ಪ್ರಯಾಣಿಸುತ್ತಿದ್ದ ಬೋಟ್ ಮಗುಚಿ ಬಿದ್ದಿದೆ. ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಲು ಈ ಭಕ್ತರು ಗಂಗಾ ನದಿಯ ಮೂಲಕ ಬೋಟ್ನಲ್ಲಿ ಸಾಗುತ್ತಿದ್ದರು.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮಥುರಾ ಜಿಲ್ಲೆಯಲ್ಲಿ ನಡೆದ ದೋಣಿ ಅಪಘಾತದಲ್ಲಿ ಸಂಭವಿಸಿದ ಜೀವಹಾನಿ ಅತ್ಯಂತ ದುರಂತ ಮತ್ತು ಹೃದಯ ವಿದ್ರಾವಕವಾಗಿದೆ ಎಂದು ಹೇಳಿದ್ದಾರೆ. “ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಸ್ಥಳಕ್ಕೆ ತಲುಪಲು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲು ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಸೂಚನೆಗಳನ್ನು ನೀಡಲಾಗಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಭಗವಾನ್ ಶ್ರೀ ರಾಮನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ