ಸಚಿವ ಎಂಬಿ ಪಾಟೀಲ್​ಗೆ ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಟಾಂಗ್

Edited By:

Updated on: Jul 07, 2025 | 12:23 PM

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ದೇವನಹಳ್ಳಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಕೂಡ ಕೆಲವು ದಿನಗಳಿಂದ ಭಾಗಿಯಾಗಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಚಿವ ಎಂಬಿ ಪಾಟೀಲ್, ಅವರು (ಪ್ರಕಾಶ್ ರೈ) ಬೇರೆ ಕಡೆ ಹೋರಾಟ ಮಾಡಲಿ ಎಂದಿದ್ದರು. ಅದಕ್ಕೀಗ ಪ್ರಕಾಶ್ ರೈ ತಿರುಗೇಟು ನೀಡಿದ್ದಾರೆ.

ದೇವನಹಳ್ಳಿ, ಜುಲೈ 7: ದೇವನಹಳ್ಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪರ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ನಟ ಪ್ರಕಾಶ್ ರೈ ಇದೀಗ ಸಚಿವ ಎಂಬಿ ಪಾಟೀಲ್​ಗೆ ತೀಕ್ಷ್ಣವಾದ ತಿರುಗೇಟು ನೀಡಿದ್ದಾರೆ. ಪ್ರಕಾಶ್ ರೈ ಬೇರೆ ಕಡೆ ಹೋರಾಟ ಮಾಡಲಿ ಎಂದು ಎಂಬಿ ಪಾಟೀಲ್ ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿ ವಿಡಿಯೋ ಬಿಡುಗಡೆ ಮಾಡಿರುವ ಪ್ರಕಾಶ್ ರೈ, ದೇವನಹಳ್ಳಿ ರೈತರ ಸಮಸ್ಯೆ ಬಗ್ಗೆ ಇಲ್ಲಿಯೇ ಹೋರಾಟ ಮಾಡಬೇಕು. ನಾವು ದೇಶದ ಹಲವು ಕಡೆ ಹೋರಾಟ ಮಾಡಿದ್ದೇವೆ. ತಮಿಳುನಾಡಿನ ರೈತರ ಪರ ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದೇನೆ. ಪಂಜಾಬ್​​​ನಲ್ಲಿ ರೈತರು ಹೋರಾಟ ಮಾಡಿದಾಗಲೂ ಭಾಗವಹಿಸಿದ್ದೆ. ಪ್ರಧಾನಿ ಮೋದಿಗೆ ನಿಮಗಿಂತ ಹೆಚ್ಚು ಪ್ರಶ್ನೆ ಮಾಡುವವನು ನಾನೇ ಎಂದು ಹೇಳಿದ್ದಾರೆ.

ಆಯಾ ಹೋರಾಟಗಳನ್ನು ಆಯಾ ರಾಜ್ಯಗಳಲ್ಲೇ ನಾವು ಮಾಡುತ್ತೇವೆ. ನಾವು ಯಾವ ಪಕ್ಷದವರೂ ಅಲ್ಲ, ಜನರ‌ ಪಕ್ಷದವರು. ಜನರಿಂದ ಆಯ್ಕೆಯಾದ ಪ್ರತಿನಿಧಿ‌ಯಾಗಿ ಜವಾಬ್ದಾರಿಯಿಂದ ಮಾತನಾಡಿ. ದೇವನಹಳ್ಳಿ ರೈತರ ವಿಚಾರವಾಗಿ ಕಾನೂನು ರೀತಿ ಪರಿಹಾರ ಹುಡುಕಿ. ನಿಮ್ಮ ಕಡೆಯಿಂದ ಆಗದಿದ್ದರೆ ನಮ್ಮ ಬಳಿಯೇ ಬನ್ನಿ ಎಂದು ಪ್ರಕಾಶ್ ರೈ ಹೇಳಿದ್ದಾರೆ. ಕೆಐಎಡಿಬಿ ಭೂಸ್ವಾಧೀನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಯೋಚಿಸಿ. ನಮ್ಮ ಬಳಿ ಸುಪ್ರೀಂ ಕೋರ್ಟ್​​ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡರಿದ್ದಾರೆ. ಅವರ ಬಳಿ ಸಲಹೆ ಕೇಳೋಣ ಎಂದು ಪ್ರಕಾಶ್ ರೈ ಹೇಳಿದ್ದಾರೆ.

ದೇವನಹಳ್ಳಿ ಭೂಸ್ವಾಧೀನ ವಿವಾದದ ಹಿನ್ನೆಲೆಯೇನು? ಶುರುವಾಗಿದ್ದೇಕೆ?

ಉದ್ದೇಶಿತ ಏರೋಸ್ಪೇಸ್ ಮತ್ತು ಟೆಕ್ ಪಾರ್ಕ್‌ಗಾಗಿ ದೇವನಹಳ್ಳಿಯ ಚನ್ನರಾಯಪಟ್ಟಣ ಹೋಬಳಿಯ ಹಳ್ಳಿಗಳ ರೈತರ ಭೂಸ್ವಾಧೀನ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿತ್ತು. ಭೂಸ್ವಾಧೀನಕ್ಕೆ 13 ಗ್ರಾಮಗಳ ರೈತರು ಆಕ್ಷೇಪ ವ್ಯಕ್ತಪಡಿಸಿದ್ದು, ಲಿಖಿತವಾಗಿ ಅಸಮ್ಮತಿ ಸೂಚಿಸಿದ್ದಾರೆ. ಅಲ್ಲದೆ, ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟಾಗಿಯೂ ಇತ್ತೀಚೆಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿತ್ತು. ಇದರ ಬೆನ್ನಲ್ಲೇ ರೈತರು ಹಾಗೂ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಇದೀಗ ರೈತರ ಹಾಗೂ ಸ್ಥಳೀಯರ ಹೋರಾಟಕ್ಕೆ ಪ್ರಕಾಶ್ ರೈ ಕೂಡ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 07, 2025 09:20 AM
Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More