ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಫಸ್ಟ್​ ರಿಯಾಕ್ಷನ್​

Updated By: ಪ್ರಸನ್ನ ಹೆಗಡೆ

Updated on: Nov 14, 2025 | 12:00 PM

ಬಾಗಲಕೋಟೆ ಜಿಲ್ಲೆಯ ಸಮೀರವಾಡಿ ಸಕ್ಕರೆ ಕಾರ್ಖಾನೆ ಬಳಿ ನಡೆದ ರೈತರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಪ್ರತಿಕ್ರಿಯಿಸಿದ್ದಾರೆ. ಇದು ಪೂರ್ವಯೋಜಿತ ಕೃತ್ಯವಾಗಿದ್ದು, ರೈತರ ಸೋಗಿನಲ್ಲಿ ಕಿಡಿಗೇಡಿಗಳು ಈ ಕಾರ್ಯ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬಾಗಲಕೋಟೆ, ನವೆಂಬರ್​ 14:  ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಸಮೀರವಾಡಿಯ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ನಡೆದ ರೈತರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಹಿತೇಂದ್ರ ಆರ್. ಪ್ರತಿಕ್ರಿಯೆ ನೀಡಿದ್ದಾರೆ. ಕಬ್ಬಿನ ಬೆಲೆ ನಿಗದಿ ಮತ್ತು ಹಳೆ ಬಾಕಿ ಪಾವತಿಗಾಗಿ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿಗೆ ಐದು ಬೈಕ್‌ಗಳು ಸುಟ್ಟು ಕರಕಲಾಗಿದ್ದು, ಅವು ರೈತರು ಹಾಗೂ ಕಾರ್ಮಿಕರಿಗೆ ಸೇರಿದ್ದಾಗಿವೆ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದು, ಪೆಟ್ರೋಲ್ ಕ್ಯಾನ್‌ಗಳನ್ನು ತರಲಾಗಿತ್ತು. ನಿಜವಾದ ರೈತರು ಈ ಕೃತ್ಯ ಎಸಗಿಲ್ಲ. ಬದಲಾಗಿ, ರೈತರ ಸೋಗಿನಲ್ಲಿ ಬಂದ ಕಿಡಿಗೇಡಿಗಳು ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೂರು ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.