ರಾಜಕೀಯದ 2ನೇ ಇನ್ನಿಂಗ್ಸ್ ಆರಂಭಿಸುವ ಮುನ್ನ ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಭಟ್ಕಳದಲ್ಲಿ ಮಾರ್ಚ್ 8 ರಂದು ನಡೆಯುವ ಹಿಂದೂ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡುವ ಮೂಲಕ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣದ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎನ್ನಲಾಗಿದೆ. ಅದರ ಪೂರ್ವಭಾವಿಯಾಗಿ ಅವರು ಸೋಮವಾರ ಶಿರಸಿಯ ಮಾರಿಕಾಂಬಾ ದೇವಿಯ ದರ್ಶನ ಪಡೆದರು. ಹೆಗಡೆ ಅವರ ಈ ನಡೆ ಜಿಲ್ಲೆ ಹಾಗೂ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಕಾರವಾರ, ಮಾರ್ಚ್ 2: ಲೋಕಸಭೆ ಚುನಾವಣೆಯ ಟಿಕೆಟ್ ಕೈ ತಪ್ಪಿದ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಇದ್ದ ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಇದೀಗ ರಾಜಕೀಯ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿರುವ ಸೂಚನೆ ನೀಡಿದ್ದಾರೆ. ಅದಕ್ಕೂ ಮುನ್ನ ಉತ್ತರ ಕನ್ನಡ ಜಿಲ್ಲೆಯ ಶಕ್ತಿ ದೇವತೆಯಾದ ಶಿರಸಿ ಮಾರಿಕಾಂಬಾ ದೇವಿಯ ಆಶೀರ್ವಾದ ಪಡೆದರು. ಶಿರಸಿಯಲ್ಲಿ ನಡೆಯುತ್ತಿರುವ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯ ಸಂದರ್ಭ ಸೋಮವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ಪತ್ನಿಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಹೆಗಡೆ, ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಎರಡು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆ ಉತ್ತರ ಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವಗಳಲ್ಲಿ ಒಂದಾಗಿದೆ.
ಲೋಕಸಭೆ ಟಿಕೆಟ್ ಕೈ ತಪ್ಪಿದ ಬಳಿಕ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದಿದ್ದ ಹೆಗಡೆ, ಇದೀಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಮಾರ್ಚ್ 8ರಿಂದ ಅವರು ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಲಿರುವುದಾಗಿ ತಿಳಿದುಬಂದಿದ್ದು, ಅದೇ ದಿನ ಭಟ್ಕಳದಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.