ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದ್ದು, ಇದಕ್ಕೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ವಿದ್ಯಾರ್ಥಿಗಳ ಮನಸ್ಸಿಗೆ ನೋವುಂಟು ಮಾಡಿದ್ದು, ಧಾರ್ಮಿಕ ಆಚರಣೆಗೆ ಧಕ್ಕೆ ತಂದಿದೆ ಎಂದು ಪೋಷಕರು ದೂರಿದ್ದಾರೆ.
ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷೆಗೆ ಹಾಜರಾಗಿದ್ದ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆಸುವಂತೆ ಸೂಚಿಸಿದ್ದಾರೆ. ಜನಿವಾರ ತೆಗೆಯಲು ವಿದ್ಯಾರ್ಥಿಗಳು ನಿರಾಕರಿಸಿದಾಗ, ಅವರನ್ನು ಪರೀಕ್ಷೆಗೆ ಕೂರಲು ಬಿಡುವುದಿಲ್ಲ ಎಂದು ಹೇಳಿ ಮನೆಗೆ ಕಳುಹಿಸುವ ಬೆದರಿಕೆ ಹಾಕಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಘಟನೆ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಧಾರ್ಮಿಕ ಆಚರಣೆಯ ಭಾಗವಾಗಿರುವ ಜನಿವಾರ ತೆಗೆಸುವ ಕ್ರಮವು ಧಾರ್ಮಿಕ ಹಕ್ಕಿಗೆ ಧಕ್ಕೆ ತಂದಿದೆ ಎಂದು ಪೋಷಕರು ಅಭಿಪ್ರಾಯಪಟ್ಟಿದ್ದಾರೆ. ಇಂತಹ ಘಟನೆಗಳು ಹಿಂದೂ ವಿರೋಧಿ ನೀತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಕೆಲ ಪೋಷಕರು ಸರ್ಕಾರವನ್ನು ದೂಷಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
