ಬ್ಯಾಂಕ್ ಲೋನ್ ಕಟ್ಟಿಲ್ಲವೆಂದು ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಬಳಿಯ ಆತ್ರೇಯ ಆಯುರ್ವೇದಿಕ್ ಮಹಾವಿದ್ಯಾಲಯಕ್ಕೆ ಕಳೆದೊಂದು ತಿಂಗಳಿಂದ ಬೀಗ ಹಾಕಿರುವುದರಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬ್ಯಾಂಕ್ ಸಾಲದ ವಿಚಾರದಿಂದ ಕಾಲೇಜು ಮುಚ್ಚಲಾಗಿದೆ ಎನ್ನಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ನಡೆಸುವುದಾಗಿ ಆಡಳಿತ ಮಂಡಳಿ ತಿಳಿಸಿದೆ.
ದೇವನಹಳ್ಳಿ, ಆಗಸ್ಟ್ 24: ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಬಳಿಯ ಆತ್ರೇಯ ಆಯುರ್ವೇದಿಕ್ ಮಹಾವಿದ್ಯಾಲಯಕ್ಕೆ ಬೀಗ ಬಿದ್ದಿರುವುದರಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದು ವಿದ್ಯಾಭ್ಯಾಸ ಮಾಡುತ್ತಿರುವ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ ಪರಿಸ್ಥಿತಿಗೆ ಸಿಲುಕಿದ್ದಾರೆ. ಕಳೆದ ಒಂದು ತಿಂಗಳಿಂದ ಕಾಲೇಜು ಬಂದ್ ಆಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗಿದೆ. ಬ್ಯಾಂಕ್ ಸಾಲದ ಬಾಕಿ ಪಾವತಿಯಾಗದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ ಹಾಕಲಾಗಿದೆ ಎಂದು ತಿಳಿದುಬಂದಿದೆ.
ಕಾಲೇಜು ಸಿಬ್ಬಂದಿ, ಸದ್ಯಕ್ಕೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುವುದು ಹಾಗೂ ಶೀಘ್ರದಲ್ಲೇ ಕಾಲೇಜು ಪುನರಾರಂಭಿಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿರುವುದಾಗಿ ಹೇಳಲಾಗಿದೆ. ಆದರೆ, ಕಾಲೇಜು ಯಾವಾಗ ಆರಂಭವಾಗಲಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲದೆ ವಿದ್ಯಾರ್ಥಿಗಳು ಗೊಂದಲದಲ್ಲಿದ್ದಾರೆ. ಇದರ ನಡುವೆ ಬಾಕಿ ಶುಲ್ಕ ಪಾವತಿಸದಿದ್ದರೆ ದಿನಕ್ಕೆ ₹500 ದಂಡ ವಿಧಿಸಲಾಗುವುದು ಎಂದು ಆಡಳಿತ ಮಂಡಳಿ ನೋಟಿಸ್ ನೀಡಿದೆ ಎಂಬ ಆರೋಪವೂ ಕೇಳಿಬಂದಿದೆ.
ಕಾಲೇಜು ಮುಚ್ಚಿರುವುದರಿಂದ ತಮ್ಮ ಶಿಕ್ಷಣದ ಭವಿಷ್ಯದ ಬಗ್ಗೆ ಆತಂಕಗೊಂಡಿರುವ ವಿದ್ಯಾರ್ಥಿಗಳು, ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಕಾಲೇಜು ಪುನರಾರಂಭಿಸಲು ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
