ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ: ರೈತರು ಫುಲ್ ಖುಷ್

Edited By:

Updated on: Jul 27, 2026 | 9:31 AM

ಕೃಷ್ಣಾ ನದಿ ಮೇಲ್ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ, ಬಸವಸಾಗರ ಜಲಾಶಯದಿಂದ 30 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ರಾಯಚೂರಿನ ಗುರ್ಜಾಪುರ ಬ್ರಿಡ್ಜ್-ಕಂ-ಬ್ಯಾರೇಜ್‌ನ 196 ಗೇಟ್‌ಗಳನ್ನು ತೆರೆದು ನೀರು ಸುಗಮವಾಗಿ ಹರಿಯುವಂತೆ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ. ಇದು ಬರಗಾಲದಿಂದ ಕಂಗೆಟ್ಟಿದ್ದ ರೈತರಿಗೆ ಕೊಂಚ ಸಮಾಧಾನ ತಂದಿದೆ, ಆದರೂ ಕಾಲುವೆ ನೀರು ಬಿಡುಗಡೆಯ ಬಗ್ಗೆ ಅವರಲ್ಲಿ ಕಾಳಜಿ ಇದೆ.

ಯಾದಗಿರಿ, ಜುಲೈ 27: ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಆಲಮಟ್ಟಿ ಜಲಾಶಯ ಭರ್ತಿಯಾಗುತ್ತಿದೆ. ಬಸವಸಾಗರ ಜಲಾಶಯವೂ ತುಂಬಿದ್ದು, ಡ್ಯಾಂನಿಂದ ಕೃಷ್ಣಾ ನದಿಗೆ 30 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ರಾಯಚೂರು ತಾಲ್ಲೂಕಿನ ಗುರ್ಜಾಪುರದಲ್ಲಿರುವ ಬ್ರಿಡ್ಜ್-ಕಂ-ಬ್ಯಾರೇಜ್‌ನ 196 ಗೇಟ್‌ಗಳನ್ನು ತೆರೆಯುವ ಕಾರ್ಯ ಭರದಿಂದ ಸಾಗುತ್ತಿದೆ. ಆರ್‌ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕಕ್ಕೆ ಸೇರಿದ ಈ ಬ್ಯಾರೇಜ್‌ನ ಗೇಟ್‌ಗಳನ್ನು ತೆರೆಯುವುದರಿಂದ ಹಿನ್ನೀರಿನ ಸಂಗ್ರಹವನ್ನು ತಪ್ಪಿಸಿ, ನೀರು ಸುಗಮವಾಗಿ ಹರಿಯಲು ಸಹಾಯಕವಾಗುತ್ತದೆ. ಹಿನ್ನೀರಿನಿಂದಾಗಿ ಗುರ್ಜಾಪುರ, ಮರಚೇಣಿಗೆ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಿಗೆ ತೊಂದರೆಯಾಗುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಿಬ್ಬಂದಿ ಈಗಾಗಲೇ ನೂರಕ್ಕೂ ಹೆಚ್ಚು ಗೇಟ್‌ಗಳನ್ನು ತೆರೆದಿದ್ದಾರೆ.

ಭೀಕರ ಬರಗಾಲದಿಂದ ತತ್ತರಿಸಿದ್ದ ರೈತರಿಗೆ, ಈ ನೀರು ಬಿಡುಗಡೆಯು ಕೊಂಚ ನಿರಾಳತೆಯನ್ನು ತಂದಿದೆ. ಕೃಷಿ ಚಟುವಟಿಕೆಗಳು ಮತ್ತೆ ಪ್ರಾರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ. ದೇವರಸೂಗೂರು, ಗಂಜಿಹಳ್ಳಿ, ಡಿ. ರಾಮಪುರ ಮುಂತಾದ ಕೆಳಭಾಗದ ಹಳ್ಳಿಗಳಿಗೆ ನೀರು ತಲುಪುವ ಭರವಸೆ ಮೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us