ಬೆಂಗಳೂರು: ಗೃಹಿಣಿ ಅನುಮಾನಾಸ್ಪದ ಸಾವು, ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪ
ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳದಿಂದ ಗೃಹಿಣಿ ವಂದನಾ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಮದುವೆಯಾದ ಮೂರು ವರ್ಷಗಳಿಂದ ಪತಿ ಕುಟುಂಬದಿಂದ ಕಿರುಕುಳ ಎದುರಿಸುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಪೊಲೀಸರು ಮಧ್ಯಸ್ಥಿಕೆ ವಹಿಸಿದ್ದರೂ ಕಿರುಕುಳ ನಿಂತಿರಲಿಲ್ಲ. ವಂದನಾ ಆತ್ಮಹತ್ಯೆ ಮಾಡಿಕೊಂಡಿಲ್ಲ. ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಗಂಭೀರ ಆರೋಪ ಮಾಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಬೆಂಗಳೂರು, ಮೇ 2: ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೃಹಿಣಿ ವಂದನಾ ಎಂಬವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಆಕೆ ವರದಕ್ಷಿಣ ಕಿರುಕುಳದಿಂದ ಮೃತಪಟ್ಟಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಮಗಳಿಗೆ ಪತಿಯ ಮನೆಯವರು ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ವಂದನಾ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.
ಮೂರು ವರ್ಷಗಳ ಹಿಂದೆ ವಂದನಾ ವಿಕ್ರಂಶೇಷ್ ಎಂಬವರನ್ನು ಮದುವೆಯಾಗಿದ್ದರು. ಮದುವೆಯಾದಾಗಿನಿಂದಲೂ ಪತಿಯ ಮನೆಯವರಿಂದ ವರದಕ್ಷಿಣೆ ಕಿರುಕುಳ ಎದುರಿಸುತ್ತಿದ್ದರು ಎಂದು ವಂದನಾ ಕುಟುಂಬದವರು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ರಾಜ ಸಂಧಾನ ಕೂಡ ನಡೆಸಿದ್ದರು. ಆದರೆ, ಕಿರುಕುಳ ನಿಂತಿರಲಿಲ್ಲ. ಗುರುವಾರ ಸಂಜೆ ವಂದನಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮಗಳು ಧೈರ್ಯವಂತೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ವ್ಯಕ್ತಿಯಲ್ಲ. ಇದು ಕೊಲೆಯೇ ಎಂದು ಕುಟುಂಬದವರು ಹೇಳುತ್ತಿದ್ದಾರೆ. ಅಲ್ಲದೆ, ವಂದನಾ ಪತಿಯ ಕುಟುಂಬದವರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೈಕ್, ಚಿನ್ನಾಭರಣ ಕೊಟ್ಟಿದ್ದಲ್ಲದೆ 4 ಲಕ್ಷ ರೂ. ಖರ್ಚು ಮಾಡಿ ಮದುವೆ ಮಾಡಿದ್ದೆವು. ಅದ್ಧೂರಿಯಾಗಿ ಮದುವೆ ಮಾಡಿದ್ದರೂ ಮತ್ತೆ ವರದಕ್ಷಿಣೆಗಾಗಿ ಕಿರುಕುಳ ಕೊಟ್ಟಿದ್ದಾರೆ ಎಂದು ವಂದನಾ ಕುಟುಂಬದವರು ಆರೋಪಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
