ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು: ನಾಳೆಯಿಂದಲೇ ಶುರುವಾಗಲಿದೆ ತೆರವು ಕಾರ್ಯ

Updated on: Jun 30, 2026 | 12:25 PM

ಮುಖ್ಯಾಂಶಗಳು

  • ಫುಟ್​​ಪಾತ್ ತೆರವಿಗೆ ಜುಲೈ 1 ರಿಂದಲೇ ಬೃಹತ್ ಕಾರ್ಯಾಚರಣೆ
  • ಸಚಿವ ಕೃಷ್ಣ ಭೈರೇಗೌಡರಿಂದ ಕಟ್ಟುನಿಟ್ಟಿನ ಸೂಚನೆ
  • ಪರ್ಯಾಯ ವ್ಯವಸ್ಥೆಗೆ ಬೀದಿಬದಿ ವ್ಯಾಪಾರಿಗಳ ಆಗ್ರಹ

ಬೆಂಗಳೂರಿನಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆಗೆ ಇಂದು ಅಂತಿಮ ಗಡುವು. ಜುಲೈ 1 ರಿಂದ ಜಿಬಿಎ ಮತ್ತು ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೃಹತ್ ಅಭಿಯಾನ ಆರಂಭವಾಗಲಿದೆ. ಸಚಿವ ಕೃಷ್ಣ ಭೈರೇಗೌಡರು ಇದಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಪಾದಚಾರಿಗಳ ಓಡಾಟಕ್ಕೆ ಮೀಸಲಾಗಿರುವ ಫುಟ್‌ಪಾತ್‌ಗಳನ್ನು ಮುಕ್ತಗೊಳಿಸಲು ನಿರ್ಧರಿಸಲಾಗಿದೆ. ಬೀದಿಬದಿ ವ್ಯಾಪಾರಿಗಳು ಪರ್ಯಾಯ ವ್ಯವಸ್ಥೆ ಕೇಳುತ್ತಿದ್ದರೂ, ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಸಿದ್ಧರಾಗಿದ್ದಾರೆ.

ಬೆಂಗಳೂರು, ಜೂನ್ 30: ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸಲು ಇಂದು ಅಂತಿಮ ಗಡುವು ನೀಡಲಾಗಿದೆ. ಜುಲೈ 1 ರಿಂದ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಮತ್ತು ಐದು ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೃಹತ್ ಕಾರ್ಯಾಚರಣೆ ಆರಂಭವಾಗಲಿದೆ. ಸಚಿವ ಕೃಷ್ಣ ಭೈರೇಗೌಡರು ಈಗಾಗಲೇ ಎರಡು ಸುತ್ತಿನ ಸಭೆ ನಡೆಸಿ, ಯಾವುದೇ ಕಾರಣಕ್ಕೂ ಕಾರ್ಯಾಚರಣೆಯನ್ನು ನಿಲ್ಲಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೈಸೆನ್ಸ್ ಹೊಂದಿರುವ ವ್ಯಾಪಾರಿಗಳನ್ನು ಹೊರತುಪಡಿಸಿ, ಉಳಿದ ಅತಿಕ್ರಮಣಗಳನ್ನು ತೆರವುಗೊಳಿಸಲಾಗುತ್ತದೆ. ಫುಟ್‌ಪಾತ್‌ಗಳು ಜನಸಾಮಾನ್ಯರ ಹಕ್ಕು ಮತ್ತು ಪಾದಚಾರಿಗಳ ಓಡಾಟಕ್ಕೆ ಮಾತ್ರ ಮೀಸಲಾಗಿವೆ ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು. ಪಾರ್ಕಿಂಗ್, ಬೀದಿಬದಿ ವ್ಯಾಪಾರ, ಕಟ್ಟಡ ಸಾಮಗ್ರಿಗಳ ಸಂಗ್ರಹ ಮತ್ತು ಬಿಡಾಡಿ ವಾಹನ ನಿಲುಗಡೆಯಂತಹ ಹಲವು ವಿಧದ ಅತಿಕ್ರಮಣಗಳನ್ನು ತೆರವುಗೊಳಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಮತ್ತೊಂದೆಡೆ, ಬೀದಿಬದಿ ವ್ಯಾಪಾರಿಗಳು ಸರ್ಕಾರದಿಂದ ಪರ್ಯಾಯ ವ್ಯವಸ್ಥೆ ಕೇಳುತ್ತಿದ್ದಾರೆ. ಆದರೆ, ಜಿಬಿಎ ಯಾವುದೇ ರಾಜಿ ಮಾಡಿಕೊಳ್ಳದೆ, 2,000 ಕಿಲೋಮೀಟರ್ ಪ್ರಮುಖ ರಸ್ತೆಗಳಲ್ಲಿನ ಫುಟ್‌ಪಾತ್‌ಗಳನ್ನು ಮುಕ್ತಗೊಳಿಸಲು ದೃಢ ನಿರ್ಧಾರ ಕೈಗೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us