ಫುಟ್ಪಾತ್ ತೆರವು ಬೆನ್ನಲ್ಲೇ ವಾಹನ ಟೋಯಿಂಗ್ ಬಗ್ಗೆ ಸಚಿವ ಕೃಷ್ಣಬೈರೇಗೌಡ ಸುಳಿವು
ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಬೀದಿಬದಿ ವ್ಯಾಪಾರಿಗಳ ವಿರುದ್ಧ ಅಲ್ಲ, ಬದಲಿಗೆ ಪಾದಚಾರಿಗಳ ಸುರಕ್ಷತೆಗಾಗಿ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪಾದಚಾರಿಗಳ ಹಕ್ಕು ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. ವ್ಯಾಪಾರಿಗಳಿಗೆ ಗುರುತಿನ ಚೀಟಿ ಹಾಗೂ ವ್ಯಾಪಾರ ಸ್ಥಳ ನಿಗದಿಗಾಗಿ ಪ್ರಾಥಮಿಕ ಟೌನ್ ವೆಂಡಿಂಗ್ ಸಮಿತಿ ರಚಿಸಲು ಸೂಚನೆ ನೀಡಲಾಗಿದೆ.
ಬೆಂಗಳೂರು, ಜುಲೈ 09: ನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವಿಗೆ ಬೀದಿಬದಿ ವ್ಯಾಪಾರಿಗಳು ಬುಧವಾರ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇಂದು ಸಚಿವ ಕೃಷ್ಣಬೈರೇಗೌಡ ಬೀದಿಬದಿ ವ್ಯಾಪಾರಿಗಳು ಹಾಗೂ ಸಂಘಟನೆಗಳ ಜೊತೆ ಮಹತ್ವದ ಸಭೆ ಮಾಡಿದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾದಚಾರಿ ಮಾರ್ಗದಲ್ಲಿ ನಿಲ್ಲಿಸಿದ ವಾಹನ ಟೋಯಿಂಗ್ ಬಗ್ಗೆ ನಾಳೆ ಸಭೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ಆದೇಶದಂತೆ ಒತ್ತುವರಿ ತೆರವು ಮಾಡುತ್ತಿದ್ದು, ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಇನ್ನೂ 10% ಕೂಡ ಒತ್ತುವರಿ ತೆರವು ಆಗಿಲ್ಲ. ನಮ್ಮ ಉದ್ದೇಶ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಅಲ್ಲ. ಇದರಲ್ಲಿ ನನ್ನ ವೈಯಕ್ತಿಕ ವಿಷಯ ಇಲ್ಲ. ಆದರೆ ಬೆಂಗಳೂರು ಸ್ವಲ್ಪವಾದರೂ ಬದಲಾವಣೆ ಆಗಬೇಕು ಅಷ್ಟೇ. ಬೆಂಗಳೂರಿನಲ್ಲಿ 3 ವರ್ಷದಲ್ಲಿ 930 ಜನ ಪಾದಚಾರಿಗಳು ಸತ್ತಿದ್ದಾರೆ. ನೂರಾರು ಜನರು ಗಂಭೀರ ಗಾಯಗೊಂಡಿದ್ದಾರೆ ಎಂದು ಹೇಳಿದರು.
ವರದಿ: ಅರುಣ್ ಕುಮಾರ್
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

