ಸಾಲು ಸಾಲು ರಜೆ: ಮೆಜೆಸ್ಟಿಕ್ನಲ್ಲಿ ಬಸ್ಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು
ವರಮಹಾಲಕ್ಷ್ಮಿ ಹಬ್ಬ ಹಾಗೂ ಸರಣಿ ರಜೆಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಜನರು ತಮ್ಮ ಸ್ವಂತ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. ಮೆಜೆಸ್ಟಿಕ್ನಲ್ಲಿ ಖಾಸಗಿ ಬಸ್ಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಕೆಎಸ್ಆರ್ಟಿಸಿ ಹೆಚ್ಚುವರಿ ಬಸ್ಗಳನ್ನು ಓಡಿಸುತ್ತಿದೆ. ಟಿಕೆಟ್ ದರ ಸ್ವಲ್ಪ ಏರಿಕೆಯಾದರೂ, ಪ್ರಯಾಣಿಕರು ಸಂತಸದಿಂದ ಪ್ರಯಾಣಿಸುತ್ತಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಿಗೆ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು, ಆಗಸ್ಟ್ 20: ನಾಡಿನಾದ್ಯಂತ ನಾಳೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಬೆನ್ನಲ್ಲೇ ನಾಲ್ಕನೇ ಶನಿವಾರ ಹಾಗೂ ಭಾನುವಾರದ ಸಾಲು ಸಾಲು ರಜೆಗಳು ಬಂದಿರುವ ಹಿನ್ನೆಲೆ ಬೆಂಗಳೂರಿನಲ್ಲಿ ನೆಲೆಸಿರುವ ಸಾವಿರಾರು ಮಂದಿ ತಮ್ಮ ಕುಟುಂಬದೊಂದಿಗೆ ಹಬ್ಬ ಆಚರಿಸಲು ಸ್ವಂತ ಊರುಗಳತ್ತ ಹೊರಟಿದ್ದಾರೆ. ಇದರಿಂದಾಗಿ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳಿಗೆ ಪ್ರಯಾಣಿಕರು ತಂಡೋಪತಂಡವಾಗಿ ಲಗ್ಗೆ ಇಟ್ಟಿದ್ದು, ನಿಲ್ದಾಣಗಳಲ್ಲಿ ಜನಜಂಗುಳಿ ಕಂಡುಬರುತ್ತಿದೆ. ಮಂಗಳೂರು, ಉಡುಪಿ, ಕುಂದಾಪುರ, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ರಾಯಚೂರು, ದಾವಣಗೆರೆ ಹಾಗೂ ಯಾದಗಿರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಬಸ್ಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ಕೆಎಸ್ಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಹಾಗೂ ಕೆಕೆಆರ್ಟಿಸಿ ಸಂಸ್ಥೆಗಳು ಮೆಜೆಸ್ಟಿಕ್ ಟರ್ಮಿನಲ್-1 ಸೇರಿದಂತೆ ಪ್ರಮುಖ ಕಡೆಗಳಲ್ಲಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಿದ್ದು, ಖಾಸಗಿ ಬಸ್ಗಳಲ್ಲಿ ಟಿಕೆಟ್ ದರ ತುಸು ಏರಿಕೆಯಾಗಿದ್ದರೂ ಹೇಗಾದರೂ ಮಾಡಿ ಊರು ಸೇರಿದರೆ ಸಾಕೆಂದು ಸಾರ್ವಜನಿಕರು ಪ್ರಯಾಣ ಬೆಳೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

