ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
Bengaluru News: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 9 ಕೋಟಿ ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಐಟಿ ಅಧಿಕಾರಿಗಳ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆದಿದೆ. ಹಣ ತಮಿಳುನಾಡಿನ ತೂತುಕುಡಿಯ ಸಿಂಧು ಜ್ಯುವೆಲ್ಲರ್ಸ್ ಮಾಲೀಕ ಸಚಿನ್ಗೆ ಸೇರಿದ್ದು ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಬೆಂಗಳೂರು, ಆಗಸ್ಟ್ 21: ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 9 ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ. ಆಗಸ್ಟ್ 18ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿಗಳಿಂದ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದರು. ತಪಾಸಣೆ ವೇಳೆ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ಪೊಲೀಸರು ಹಣ ಹಾಗೂ ಕಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನಗದು ತಮಿಳುನಾಡಿನ ತೂತುಕುಡಿಯ ಸಿಂಧು ಜ್ಯುವೆಲ್ಲರ್ಸ್ ಮಾಲೀಕ ಸಚಿನ್ಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದೆ.
ಬಳಿಕ ಸಚಿನ್ನನ್ನು ಪೊಲೀಸರು ಆದಾಯ ತೆರಿಗೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಸಚಿನ್ ನಿವಾಸದಲ್ಲೂ ಪರಿಶೀಲನೆ ನಡೆಸಿದ್ದು, ಅಲ್ಲಿ 1.3 ಕೋಟಿ ರೂ. ನಗದು ಪತ್ತೆಯಾಗಿದೆ. ಜಪ್ತಿಯಾದ 9 ಕೋಟಿ ರೂ. ಹಾಗೂ ಮನೆಯಲ್ಲಿ ಸಿಕ್ಕ 1.3 ಕೋಟಿ ರೂ. ಹಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಐಟಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಹಣದ ಮೂಲ ಮತ್ತು ಅದರ ಸಾಗಣೆಯ ಉದ್ದೇಶದ ಕುರಿತು ತನಿಖೆ ಮುಂದುವರಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ