ಧಾರಾಕಾರ ಮಳೆಯಿಂದ ಬಾಗಲಕುಂಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು! ಬೈಕ್ಗಳು ಮುಳುಗಡೆ
ಬೆಂಗಳೂರಿನ ಬಾಗಲಗುಂಟೆ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸಾಕಷ್ಟು ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ಕಾಮಗಾರಿಯ ನಿರ್ಲಕ್ಷ್ಯದಿಂದಾಗಿ ಭೈರವೇಶ್ವರ ಬಡಾವಣೆಯ ನಿವಾಸಿಗಳು ಜಾಗರಣೆ ಮಾಡುವಂತಾಗಿದೆ. ಮನೆಗಳ ನೆಲಮಾಳಿಗೆಯಲ್ಲಿ ನೀರು ತುಂಬಿದ ಕಾರಣ ಬೈಕ್ಗಳು ಸೇರಿದಂತೆ ಹಲವು ವಸ್ತುಗಳು ಹಾನಿಗೊಳಗಾಗಿವೆ.
ಬೆಂಗಳೂರು, ಸೆಪ್ಟೆಂಬರ್ 16: ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಯು ಬಾಗಲಗುಂಟೆ ಪ್ರದೇಶದಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ಭೈರವೇಶ್ವರ ಬಡಾವಣೆಯಲ್ಲಿ ಹಲವಾರು ಮನೆಗಳಿಗೆ ನೀರು ನುಗ್ಗಿದ್ದು, ಸ್ಥಳೀಯ ನಿವಾಸಿಗಳು ರಾತ್ರಿಯಿಡೀ ಜಾಗರಣೆ ಮಾಡುವ ಪರಿಸ್ಥಿತಿ ಎದುರಾಯಿತು. ಸಂಜೆ 5 ಗಂಟೆ ಸುಮಾರಿಗೆ ಸುರಿದ ಮಳೆಯಿಂದ ರಾಜಕಾಲುವೆ ಉಕ್ಕಿ ಹರಿದು ಮನೆಗಳಿಗೆ ನುಗ್ಗಿದೆ. ರಾಜಕಾಲುವೆ ಕಾಮಗಾರಿಯ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಕಾಮಗಾರಿಯ ಸಂದರ್ಭದಲ್ಲಿ ಹೂಳೆತ್ತುವ ಕೆಲಸ ಮತ್ತು ರಿಟೈನಿಂಗ್ ವಾಲ್ ನಿರ್ಮಾಣದ ಸಮಯದಲ್ಲಿ ಮಣ್ಣನ್ನು ಅಡ್ಡಲಾಗಿ ಹಾಕಿದ ಕಾರಣ ನೀರು ರಾಜಕಾಲುವೆಯಿಂದ ಏಕಾಏಕಿ ಬಡಾವಣೆಗೆ ನುಗ್ಗಿದೆ.
ಮನೆಗಳ ಒಳಭಾಗ ಮತ್ತು ನೆಲಮಾಳಿಗೆಯಲ್ಲಿ ನೀರು ತುಂಬಿಕೊಂಡಿದ್ದು, ಐದರಿಂದ ಆರು ಬೈಕ್ಗಳು ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿವೆ. ನೆಲಮಾಳಿಗೆಯಲ್ಲಿ ಸುಮಾರು ಎಂಟು ಅಡಿಗಳಷ್ಟು ನೀರು ನಿಂತಿದ್ದು, ಮಾಲೀಕರು ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ಸಾಕಷ್ಟು ವಸ್ತುಗಳು ಹಾನಿಗೊಳಗಾಗಿವೆ. ಸ್ಥಳೀಯರೇ ಸ್ವತಃ ನೀರು ತೆರವುಗೊಳಿಸುವ ಕೆಲಸವನ್ನು ಮಾಡುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

