ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಹಲವೆಡೆ ಭಾರೀ ಅವಾಂತರ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು

Updated on: May 19, 2026 | 6:44 AM

ಬೆಂಗಳೂರಿನ ನಾಗವಾರ ಬಳಿಯ ಎಂ.ಎಸ್. ರಾಮಯ್ಯ ನಾರ್ತ್ ಸಿಟಿ ಲೇಔಟ್‌ನಲ್ಲಿ ಸೋಮವಾರ ಸಂಜೆ ಸುರಿದ ಮಳೆಗೆ ರಾಜಕಾಲುವೆ ಕೊಳಚೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಕಾಲುವೆ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳದ ಕಾರಣ ಹಳೆ ಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಾಗಿ, 300ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ನಿವಾಸಿಗಳು ಆರೋಪಿಸಿದ್ದಾರೆ.

ಬೆಂಗಳೂರು, ಮೇ 19: ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಮಳೆಗೆ ನಾಗವಾರದ ಎಂಎಸ್ ರಾಮಯ್ಯ ನಾರ್ತ್ ಸಿಟಿ ಲೇಔಟ್‌ನಲ್ಲಿ ಭಾರಿ ಅವಾಂತರ ಸಂಭವಿಸಿದೆ. ರಾಜಕಾಲುವೆಯ ಕೊಳಚೆ ನೀರು ಲೇಔಟ್ ಒಳಗೆ ನುಗ್ಗಿ ಸುಮಾರು 300ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹತ್ತು ಕ್ರಾಸ್‌ಗಳಲ್ಲಿ ಏಳಕ್ಕೂ ಹೆಚ್ಚು ಕ್ರಾಸ್‌ಗಳು ಸಂಪೂರ್ಣವಾಗಿ ಮುಳುಗಿವೆ. ರಾಜಕಾಲುವೆ ಅಗಲೀಕರಣದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಹಳೆ ಕಾಲುವೆಯನ್ನು ಒಡೆಯಲಾಗಿದ್ದರಿಂದ ನೀರಿನ ಹರಿವು ಹೆಚ್ಚಾಗಿ ಈ ಅವಾಂತರಕ್ಕೆ ಕಾರಣವಾಗಿದೆ.

ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ತೋರಿದ ಆರೋಪ ಕೇಳಿಬಂದಿದೆ. ಮಳೆಗಾಲ ಹತ್ತಿರ ಬಂದಾಗ ಕಾಮಗಾರಿ ಆರಂಭಿಸಿರುವುದು ಮತ್ತು ಅದನ್ನು ಪೂರ್ಣಗೊಳಿಸದಿರುವುದು ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಬಿಬಿಎಂಪಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದಲೇ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ನಿವಾಸಿಗಳು ತಮ್ಮ ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ಪರದಾಡುತ್ತಿದ್ದಾರೆ.

ಮತ್ತೊಂದೆಡೆ, HBR ಲೇಔಟ್​ನಲ್ಲಿ ರಸ್ತೆಗಳು ಜಲಾವೃತಗೊಂದು ಸ್ಥಳೀಯರು ಪರದಾಡುವಂತಾಯಿತು. ಹೊರಮಾವು ಬಳಿಯ SLV ವಜ್ರ ಅಪಾರ್ಟ್ಮೆಂಟ್​ನಲ್ಲೂ ಮಳೆಯಿಂದಾಗಿ ಸಂಕಷ್ಟ ಎದುರಾಯಿತು. ಬೆಲೆಬಾಳುವ ಕಾರುಗಳು ಜಲಾವೃತವಾಗಿದ್ದು, ತುರ್ತು ಸೇವೆ ಇಲ್ಲದೆ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದರು.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More