ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಕನಕಪುರ ರಸ್ತೆಯ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ: ಸಚಿವ ಎಂಬಿ ಪಾಟೀಲ್ ಮಾಹಿತಿ

Updated on: Aug 21, 2026 | 12:10 PM

ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಮುಂದಾಗಿದೆ. ಕನಕಪುರ ರಸ್ತೆ ಮತ್ತು ನೆಲಮಂಗಲ ತಾಲೂಕಿನ ಗುಡವಾರನಹಳ್ಳಿ ಸೇರಿದಂತೆ ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ಸದ್ಯ ಕನಕಪುರ ರಸ್ತೆಯ ಹಾರೋಹಳ್ಳಿ ಪ್ರದೇಶದಲ್ಲಿ ಸೂಕ್ತ ಸ್ಥಳ ಪರಿಶೀಲನೆ ಪ್ರಗತಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಆಗಸ್ಟ್ 21: ಬೆಂಗಳೂರು ಸುತ್ತಮುತ್ತ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಗುರುತಿಸುವಿಕೆ ವಿಚಾರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ಮೂರು ಸ್ಥಳಗಳನ್ನು ಗುರುತಿಸಲಾಗಿದ್ದು, ಕನಕಪುರ ರಸ್ತೆಯ ಹಾರೋಹಳ್ಳಿ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದೆ ಎಂದು ಅವರು ತಿಳಿಸಿದ್ದಾರೆ.

ಬೀದರ್ ಶಾಸಕ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ವಿಧಾನಸಭೆಯಲ್ಲಿ ಉತ್ತರಿಸಿದ ಎಂ.ಬಿ. ಪಾಟೀಲ್, ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಕನಕಪುರ ರಸ್ತೆಯ ಸೋಮನಹಳ್ಳಿ ಮತ್ತು ನೆಲಮಂಗಲ ತಾಲೂಕಿನ ಗುಡವಾರನಹಳ್ಳಿ ಬಳಿ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು. ಪ್ರಸ್ತುತ, ಕನಕಪುರ ರಸ್ತೆಯ ಹಾರೋಹಳ್ಳಿ ಪ್ರದೇಶದಲ್ಲಿ ಸೂಕ್ತ ಸ್ಥಳ ಪರಿಶೀಲನೆ ಪ್ರಗತಿಯಲ್ಲಿದೆ ಎಂದರು.

ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಸಮಿತಿಯು ಗುರುತಿಸಲಾದ ಮೂರು ಸ್ಥಳಗಳಿಗೆ ಭೇಟಿ ನೀಡಿ ಕೂಲಂಕುಷ ಪರಿಶೀಲನೆ ನಡೆಸಿದೆ. ಸ್ಥಳ ಅಂತಿಮಗೊಂಡ ಬಳಿಕ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಾದ ಜಮೀನು ಪಡೆಯುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us