ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ; ಗಾಂಜಾ ಪೆಡ್ಲರ್ಗಳ ಮೇಲೆ ಹದ್ದಿನ ಕಣ್ಣು
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಎಸ್ಪಿ ರೋಹನ್ ಜಗದೀಶ್ ನೇತೃತ್ವದಲ್ಲಿ, ಗಾಂಜಾ ಸೇವನೆ ಮಾಡಿದವರ ವೈದ್ಯಕೀಯ ಪರೀಕ್ಷೆ ನಡೆಸಿ, ಪೆಡ್ಲರ್ಗಳ ಜಾಲ ಭೇದಿಸುವ ತಂತ್ರ ಅನುಸರಿಸಲಾಗುತ್ತಿದೆ. ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ, ಒಂಬತ್ತು ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ರಾಮನಗರ, ಸೆಪ್ಟೆಂಬರ್ 10: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಗಾಂಜಾ ಮಾರಾಟ ಮತ್ತು ಸೇವನೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿತ್ತು. ಯುವ ಪೀಳಿಗೆಯನ್ನು ಮಾದಕ ವಸ್ತುಗಳಿಂದ ದೂರವಿಡುವ ಉದ್ದೇಶದಿಂದ, ಪೊಲೀಸರು ನೂತನ ತಂತ್ರವನ್ನು ಅನುಸರಿಸುತ್ತಿದ್ದಾರೆ. ಅದರಂತೆ, ಗಾಂಜಾ ಸೇವನೆ ಮಾಡುತ್ತಿರುವವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಪರೀಕ್ಷೆಯಲ್ಲಿ ಸೇವನೆ ದೃಢಪಟ್ಟರೆ, ಗಾಂಜಾ ಮೂಲ, ಪ್ರಮಾಣ ಮತ್ತು ಮಾರಾಟ ಮಾಡಿದ ಪೆಡ್ಲರ್ಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಕಳೆದ ಮೂರ್ನಾಲ್ಕು ದಿನಗಳಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು ಆರು ಲಕ್ಷ ರೂಪಾಯಿ ಮೌಲ್ಯದ ಒಂಬತ್ತು ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಸಾರ್ವಜನಿಕರು ಸಹ ಮಾದಕ ವಸ್ತುಗಳ ಸೇವನೆಯಿಂದ ದೂರವಿರಲು ಮತ್ತು ಮಾಹಿತಿ ನೀಡುವಂತೆ ಎಸ್ಪಿ ಮನವಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
