ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ: ಶೀಘ್ರದಲ್ಲೇ ಆರಂಭವಾಗಲಿದೆ ಚತುಷ್ಪಥ ರೈಲು ಮಾರ್ಗ ಕಾಮಗಾರಿ

Edited By:

Updated on: Jun 20, 2026 | 12:02 PM

ದಿನನಿತ್ಯ ಬೆಂಗಳೂರು ಮತ್ತು ತುಮಕೂರು ನಡುವೆ ರೈಲಿನಲ್ಲಿ ಸಂಚರಿಸುವ ಸಾವಿರಾರು ಉದ್ಯೋಗಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಈ ಮಾರ್ಗದಲ್ಲಿ ಗಣನೀಯವಾಗಿ ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಸಂಚಾರ ಕಲ್ಪಿಸಲು ಸುಮಾರು 6,000 ಕೋಟಿ ರೂಪಾಯಿ ವೆಚ್ಚದಲ್ಲಿ ಚತುಷ್ಪಥ ರೈಲು ಮಾರ್ಗ ನಿರ್ಮಿಸಲು ಬೃಹತ್ ಯೋಜನೆಯನ್ನು ಸಿದ್ಧಪಡಿಸಲಾಗಿದೆ.

ತುಮಕೂರು, ಜೂನ್ 20: ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ವಹಿವಾಟುಗಳಿಗಾಗಿ ಕಲ್ಪತರು ನಾಡು ತುಮಕೂರಿನಿಂದ ರಾಜಧಾನಿ ಬೆಂಗಳೂರಿಗೆ ದಿನನಿತ್ಯ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಸದ್ಯ ಕೇವಲ ಎರಡು ಪಥಗಳ (Double Track) ರೈಲ್ವೆ ಹಳಿ ಇರುವುದರಿಂದ ರೈಲುಗಳ ಸಂಚಾರ ವಿಳಂಬವಾಗುತ್ತಿದ್ದು, ಪ್ರಯಾಣಿಕರು ಪರದಾಡಬೇಕಿದೆ. ಈ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಯೋಜನೆ ಬಗ್ಗೆ ಘೋಷಣೆ ಮಾಡಿದ್ದು, ಬೆಂಗಳೂರು-ತುಮಕೂರು ನಡುವೆ ಚತುಷ್ಪಥ ರೈಲು ಮಾರ್ಗ ನಿರ್ಮಾಣದ ಪೂರ್ವ ಸಿದ್ಧತೆಗಳು ಚುರುಕಾಗಿವೆ ಎಂದು ತಿಳಿಸಿದ್ದಾರೆ.

ಈ ಉದ್ದೇಶಿತ ಬೃಹತ್ ಯೋಜನೆಗಾಗಿ ಈಗಾಗಲೇ ವಿಸ್ತೃತ ಯೋಜನಾ ವರದಿಯನ್ನು (DPR) ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅಷ್ಟೇ ಅಲ್ಲದೆ, ರೈಲ್ವೆ ಇಲಾಖೆಯ ಅತ್ಯುನ್ನತ ತಾಂತ್ರಿಕ ಸಮಿತಿಯು ಈ ವರದಿಯನ್ನು ಪರಿಶೀಲಿಸಿ ಅನುಮೋದನೆ ನೀಡಿದೆ. ಸದ್ಯ ಈ ಪ್ರಕ್ರಿಯೆಯು ರೈಲ್ವೆ ಮಂಡಳಿಯ (Railway Board) ಅಂತಿಮ ಒಪ್ಪಿಗೆಯ ಹಂತದಲ್ಲಿದ್ದು, ಬೋರ್ಡ್ ಮುದ್ರೆ ಬೀಳುತ್ತಿದ್ದಂತೆ ಯೋಜನೆ ಅಧಿಕೃತವಾಗಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಂದಾಜು 6,000 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಈ ಚತುಷ್ಪಥ ರೈಲು ಮಾರ್ಗದ ಬೃಹತ್ ಮೂಲಸೌಕರ್ಯ ಕಾಮಗಾರಿ ನಡೆಯಲಿದೆ. ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಜಮೀನನ್ನು ಗುರುತಿಸುವ ಕಾರ್ಯ ಭರದಿಂದ ಸಾಗುತ್ತಿದ್ದು, ಮುಂದಿನ ಐದಾರು ತಿಂಗಳುಗಳ ಅವಧಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯು ಸಹ ಅಧಿಕೃತವಾಗಿ ಆರಂಭವಾಗಲಿದೆ ಎಂದು ವಿ. ಸೋಮಣ್ಣ ಮುನ್ಸೂಚನೆ ನೀಡಿದ್ದಾರೆ. ಈ ನಾಲ್ಕು ಪಥಗಳ ಮಾರ್ಗ ಪೂರ್ಣಗೊಂಡರೆ, ಎಕ್ಸ್‌ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳು ಯಾವುದೇ ಸಿಗ್ನಲ್ ಕಾಯುವಿಕೆಯಿಲ್ಲದೆ ಸಂಚರಿಸಬಹುದಾಗಿದ್ದು, ಬೆಂಗಳೂರು-ತುಮಕೂರು ನಡುವಿನ ಪ್ರಯಾಣದ ಸಮಯ ಅರ್ಧಕ್ಕರ್ಧ ಕಡಿಮೆ ಆಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us