ಬೆಂಗಳೂರಿಗೆ ಭೇಟಿ ಬಗ್ಗೆ ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್

Updated on: Aug 09, 2025 | 10:24 PM

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರಂದು ಬೆಂಗಳೂರಿಗೆ ಭೇಟಿ ನೀಡಿ ನಮ್ಮ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೂ ಚಾಲನೆ ನೀಡಲಿದ್ದಾರೆ. ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್​ ಮಾಡಿದ್ದಾರೆ.

ಬೆಂಗಳೂರು, ಆಗಸ್ಟ್​ 09: ನಮ್ಮ ಮೆಟ್ರೋದ ಹಳದಿ ಮಾರ್ಗ ​ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್​ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಳದಿ ಮಾರ್ಗದ ರಾಗಿಗುಡ್ಡ ಮೆಟ್ರೋ ನಿಲ್ದಾಣವನ್ನು ವಿದ್ಯುತ್​ ದೀಪಾಲಂಕಾರದಿಂದ ಅಲಂಕರಿಸಲಾಗಿದೆ. ಪ್ರಧಾನಿ ಮೋದಿಯವರು ತಾವು ರಾಜ್ಯಕ್ಕೆ ಬರುವ ವಿಚಾರವನ್ನು ಕನ್ನಡದಲ್ಲೇ ಟ್ವೀಟ್​ ಮಾಡಿ ತಿಳಿಸಿದ್ದಾರೆ.

“ನಾಳೆ, ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು. ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಾಗುವುದು” ಎಂದು ಟ್ವೀಟ್​ ಮಾಡಿದ್ದಾರೆ.

Published on: Aug 09, 2025 10:12 PM