ಬೆಂಗಳೂರಿನಲ್ಲಿ ಮತ್ತೊಂದು ಅವೈಜ್ಞಾನಿಕ ಕಾಮಗಾರಿ: ರಸ್ತೆ ಮಧ್ಯೆ ಇರೋ ಕಂಬ ತೆಗೆಯದೇ ವೈಟ್ಟ್ಯಾಪಿಂಗ್; ಸಾರ್ವಜನಿಕರ ಆಕ್ರೋಶ
ಬೆಂಗಳೂರಿನ ದೊಮ್ಮಲೂರು ವಾರ್ಡ್ನಲ್ಲಿ ಕೈಗೊಳ್ಳಲಾದ ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆ ಮಧ್ಯೆಯೇ ಬೃಹತ್ ವಿದ್ಯುತ್ ಕಂಬವನ್ನು ಹಾಗೆಯೇ ಬಿಟ್ಟು ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಇದು ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ, ಸಮನ್ವಯದ ಕೊರತೆ ಹಾಗೂ ಅವೈಜ್ಞಾನಿಕ ಕಾಮಗಾರಿಗೆ ಹಿಡಿದ ಕನ್ನಡಿಯಾಗಿದ್ದು, ಸಾರ್ವಜನಿಕರ ಜೀವಕ್ಕೆ ಅಪಾಯ ಮತ್ತು ತೆರಿಗೆ ಹಣದ ದುರುಪಯೋಗಕ್ಕೆ ಕಾರಣವಾಗಿದೆ.
ಬೆಂಗಳೂರು, ಜೂ.9: ದೊಮ್ಮಲೂರು ವಾರ್ಡ್, ಶಾಂತಿನಗರ ವಿಧಾನಸಭಾ ಕ್ಷೇತ್ರದ ಯು. ಆರ್. ರಾವ್ ಸರ್ಕಲ್ ಬಳಿ ಕೈಗೊಂಡಿರುವ ರಸ್ತೆ ಕಾಮಗಾರಿಯೊಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೇಂಬ್ರಿಡ್ಜ್ ಲೇಔಟ್ನಲ್ಲಿ ರಸ್ತೆಗೆ ವೈಟ್ ಟ್ಯಾಪಿಂಗ್ ಮೂಲಕ ಕಾಂಕ್ರೀಟ್ ಹಾಕಲಾಗಿದ್ದು, ಒಂದು ತಿಂಗಳ ಹಿಂದೆಯೇ ಈ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ರಸ್ತೆಯ ಮಧ್ಯೆ ನಿಂತಿರುವ ಬೃಹತ್ ವಿದ್ಯುತ್ ಕಂಬವನ್ನು ತೆರವುಗೊಳಿಸದೆ ಹಾಗೆಯೇ ಬಿಟ್ಟು ರಸ್ತೆಯನ್ನು ನಿರ್ಮಿಸಲಾಗಿದೆ. ಕಾಮಗಾರಿಯ ಆರಂಭದಲ್ಲಿ ವಿದ್ಯುತ್ ಕಂಬವನ್ನು ತೆರವುಗೊಳಿಸಬೇಕಾಗಿತ್ತು. ಆದರೆ, ಅದನ್ನು ಮಾಡದೆ ಈಗ ಕಾಂಕ್ರೀಟ್ ರಸ್ತೆ ಹಾಕಿದ ಒಂದು ತಿಂಗಳ ಬಳಿಕ ಕಂಬ ತೆರವಿಗೆ ಮುಂದಾಗಿರುವುದು ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾರ್ಯವಿಧಾನವನ್ನು ಎತ್ತಿ ತೋರಿಸುತ್ತದೆ. ಈ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಈಗಾಗಲೇ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಟ್ರಾಫಿಕ್ ಜಾಮ್ ಹಾಗೂ ವಾಹನಗಳಿಗೆ ಹಾನಿಗಳಾಗಿವೆ. ಇದು ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡುವುದರ ಜೊತೆಗೆ ತೆರಿಗೆ ಹಣದ ದುರುಪಯೋಗವೂ ಆಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಬೆಂಗಳೂರು ಕೇಂದ್ರ ನಗರ ಪಾಲಿಕೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಇಂತಹ ದುಂದುವೆಚ್ಚ ಮತ್ತು ಅವೈಜ್ಞಾನಿಕ ಕಾಮಗಾರಿಗಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
