ಬಿಡದಿ ಟೌನ್ಶಿಪ್ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ: ವಿಪಕ್ಷ ನಾಯಕ ಅಶೋಕ್ ಘೋಷಣೆ
ಬಿಡದಿ ಟೌನ್ಶಿಪ್ ಯೋಜನೆ ಸೇರಿದಂತೆ ವಿವಿಧ ವಿಷಯಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಿವೆ. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅಶೋಕ್ ಈ ಬಗ್ಗೆ ಹೇಳಿಕೆ ನೀಡಿದ್ದು, ಪಕ್ಷದ ಕಾರ್ಯಕರ್ತರಿಗೆ ಪಾದಯಾತ್ರೆಯಲ್ಲಿ ಭಾಗವಹಿಸಲು ಕರೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಸಮನ್ವಯ ಸಮಿತಿಯನ್ನೂ ರಚಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು, ಆಗಸ್ಟ್ 8: ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸಲು ನಿರ್ಧಾರ ಕೈಗೊಂಡಿವೆ. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸಮನ್ವಯ ಸಭೆಯ ಬಳಿಕ ಮಾಹಿತಿ ನೀಡಿದ ವಿಪಕ್ಷ ನಾಯಕ ಅಶೋಕ್, ಹೋರಾಟದಲ್ಲಿ ಭಾಗವಹಿಸಲು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಸಮಾವೇಶಗಳನ್ನು ಆಯೋಜಿಸಲಿವೆ. ಸದನದ ಒಳಗೆ ಈಗಾಗಲೇ ಜೆಡಿಎಸ್, ಬಿಜೆಪಿಯ ಹೋರಾಟಗಳಿಗೆ ಬೆಂಬಲ ನೀಡಿದೆ. ಬರಗಾಲ, ನೈಸ್ ಯೋಜನೆ, ಬಿಡದಿ ಟೌನ್ಶಿಪ್ ಮತ್ತು ಕೆಪಿಎಸ್ಸಿ ಅಕ್ರಮಗಳಿಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚಿಸಲು ಎರಡೂ ಪಕ್ಷಗಳು ನಿರ್ಧರಿಸಿವೆ. ಈ ಎಲ್ಲಾ ವಿಚಾರಗಳಿಗೆ ಜೆಡಿಎಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಶೋಕ್ ತಿಳಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ನಡೆಯುವ ಎಲ್ಲಾ ಪ್ರಮುಖ ಹೋರಾಟಗಳಲ್ಲೂ ಒಟ್ಟಾಗಿ ಕೆಲಸ ಮಾಡುವ ತೀರ್ಮಾನವನ್ನು ಮಾಡಲಾಗಿದೆ. ಶೀಘ್ರದಲ್ಲೇ ಎರಡು-ಮೂರು ದಿನಗಳಲ್ಲಿ ಸಮನ್ವಯ ಸಮಿತಿ ರಚಿಸಲಾಗುವುದು. ಈ ಸಮಿತಿಯಲ್ಲಿ ಎರಡೂ ಕಡೆಯಿಂದ ತಲಾ ಐದು ಜನ ಸದಸ್ಯರಿರುತ್ತಾರೆ. ಜಿಲ್ಲಾ ಮಟ್ಟದಲ್ಲಿಯೂ ಎರಡೂ ಪಕ್ಷಗಳು ಒಟ್ಟಾಗಿ ಹೋರಾಟ ಮಾಡಲಿವೆ. ಜಂಟಿ ಶಾಸಕಾಂಗ ಸಭೆ ಕರೆಯುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದರ ವಿರುದ್ಧದ ಹೋರಾಟದ ಬಗ್ಗೆ ಅಂತಿಮ ತೀರ್ಮಾನ ಇನ್ನಷ್ಟೇ ಆಗಬೇಕಿದೆ ಎಂದು ಅಶೋಕ್ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

