ಮುಡಾ ಹಗರಣ ಸೃಷ್ಟಿಸಿ ಬಿಜೆಪಿಯವರು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

Updated on: Jul 29, 2024 | 12:52 PM

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಬಾಗಿಯಾಗಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡುತ್ತಿವೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಬಿಜೆಪಿಗೆ ಟಾಂಗ್​ ಕೊಟ್ಟಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣವನ್ನು ಬಿಜೆಪಿಯವರು ಸೃಷ್ಟಿ ಮಾಡುತ್ತಿದ್ದಾರೆ. ಬಿಜೆಪಿಯವರು ಬ್ಲ್ಯಾಕ್​ಮೇಲ್ ತಂತ್ರ ಮಾಡುತ್ತಿದ್ದಾರೆ. ಬಿಜೆಪಿ ಯಾವತ್ತೂ ನ್ಯಾಯದ ಪರವಾಗಿಲ್ಲ. ಮುಡಾ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇನೆ. ಇದಕ್ಕಿಂತ ಇನ್ನೇನು ಬೇಕು ಹೇಳಿ? ನ್ಯಾಯಾಂಗ ತನಿಖೆ ಅನುಮಾನದಿಂದ ನೋಡಿದರೆ ಅರ್ಥ ಇದೆಯಾ? ಬಿಜೆಪಿ ಅವಧಿಯಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಗೊತ್ತಾ? ಒಂದು ಪ್ರಕರಣವನ್ನಾದರೂ ನ್ಯಾಯಾಂಗ ತನಿಖೆ ಮಾಡಿಸಿದರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಪುಟ್ಟಯ್ಯ ಸಿಐಟಿಬಿ ಅಧ್ಯಕ್ಷರಾಗಿದ್ದಾಗ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ಎಷ್ಟು ನಿವೇಶನ ಬರೆಸಿಕೊಂಡಿದ್ದಾರೆ ಪಟ್ಟಿ ಕೊಡಲಾ?. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ 40 ವರ್ಷದ ಹಿಂದೆ ಮುಡಾ ಸೈಟ್ ಪಡೆದಿದ್ದಾರೆ. ಅದರ ಸ್ವಾಧೀನ ಪತ್ರವೂ ಪಡೆದುಕೊಂಡಿದ್ದಾರೆ. ಈಗ ಇಲ್ಲ ಎಂದು ಸುಳ್ಳು ಹೇಳಿದರೇ ಹೇಗೆ‌? ನಾನು ಸ್ವಾಧೀನ ಪತ್ರ ಪಡೆದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಿರುವುದು ಸುಳ್ಳು. ಇವರೆಲ್ಲ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ತಪ್ಪು ಮಾಡಿಲ್ಲ ಅಂದ್ರೆ ಬೇಜಾರು ಆಗಲ್ಲ

ಮುಡಾ ಅರೋಪ ವಿಚಾರದಲ್ಲಿ ನನಗೆ ಯಾವ ಬೇಸರ ಆಗಿಲ್ಲ. ತಪ್ಪೇ ಮಾಡಿಲ್ಲ ಎನ್ನುವುದಾದರೇ ಬೇಸರ ಏಕೆ ಆಗುತ್ತೆ? 40 ವರ್ಷದ ರಾಜಕಾರಣದಲ್ಲಿ ಇಂತಹ ಆರೋಪ ಬಹಳ ಬಂತು. ಇದನ್ನು ರಾಜಕೀಯವಾಗಿ ಎದುರಿಸುತ್ತೇನೆ‌ ಎಂದರು.

ನಾವೂ ಪಾದಯಾತ್ರೆ ಮಾಡ್ತಿವಿ

ಬಿಜೆಪಿ ನಾಯಕರು ಪಾದಯಾತ್ರೆ ಮಾಡುವುದಾರೆ ಮಾಡಲಿ. ರಾಜಕೀಯವಾಗಿ ಎದುರಿಸಲು ನಾವು ಪಾದಯಾತ್ರೆ ಮಾಡುತ್ತೇವೆ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ಕೊಟ್ಟರು.​

ಇದನ್ನೂ ಓದಿ: ಬಜೆಟ್​​ನಲ್ಲಿ ಮಂಡ್ಯಕ್ಕೆ ಏನು ಕೊಟ್ಟಿದ್ದೀರಿ? ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More