ಏಕಾಏಕಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ, ಕೂಡಲೇ ಆಸ್ಪತ್ರೆಗೆ ಕರೆದೊಯ್ದ ಪುತ್ರ

Updated on: Jul 28, 2024 | 6:47 PM

ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಂದು ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಮೂಗಿನಿಂದ ಏಕಾಏಕಿ ರಕ್ತಸ್ರಾವವಾಗಿದೆ.

ಬೆಂಗಳೂರು, (ಜುಲೈ 28): ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಹಿಡಿದುಕೊಂಡು ಮುಂದೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟ ಮಾಡಬೇಕೆಂದು ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಪ್ಲ್ಯಾನ್ ಮಾಡಿವೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರು ಕೇಳಿಬಂದಿದ್ದರಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುವ ಬಗ್ಗೆ ಚರ್ಚೆ ನಡೆದಿದೆ. ಈ ಸಂಬಂಧ ಇಂದು (ಜುಲೈ 28) ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಭೆ ಮಾಡಿ ಚರ್ಚೆ ಮಾಡಿದ್ದಾರೆ. ಬಳಿಕ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತ ಸೋರಿದೆ. ಸುದ್ದಿಗೋಷ್ಠಿ ವೇಳೆಯಲ್ಲೇ ದಿಢೀರ್​​ ಮೂಗಿನಲ್ಲಿ ರಕ್ತಸ್ರಾವವಾಗಿದೆ. ಇದರಿಂದ ಕೆಲ ಕಾಲ ಆತಂಕ ಸೃಷ್ಟಿಸಿದ್ದು, ಕೂಡಲೇ ಕುಮಾರಸ್ವಾಮಿ ಅವರನ್ನು ಪುತ್ರ ನಿಖಿಲ್ ಆಸ್ಪತ್ರಗೆ ಕರೆದೊಯ್ದಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ JDS, BJP ನಾಯಕರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವಾಗ ದಿಢೀರ್​ ಕುಮಾರಸ್ವಾಮಿ ಮೂಗಿನಲ್ಲಿ ರಕ್ತ ಸೋರಿದೆ. ಈ ರಕ್ತ ಸೋರುವುದನ್ನು ನೋಡಿ ಯಡಿಯೂರಪ್ಪ ಸೇರಿದಂತೆ ಇತರೆ ನಾಯಕರು ಗಾಬರಿಯಾಗಿದ್ದಾರೆ.

ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಪದೇ ಪದೇ ಒರೆಸಿಕೊಂಡರು. ಅದರೂ ರಕ್ತ ಸೋರುವಿಕೆ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾಗಿದ್ದು, ಬಿಳಿ ಶರ್ಟ್ ರಕ್ತಮಯವಾಗಿದೆ. ಇದನ್ನು ನೋಡಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು.

Published on: Jul 28, 2024 06:34 PM
Follow Us