ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿದ KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
Cauvery Water Dispute: ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಿಗರು ಕೆಆರ್ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರ ನೀರು ಬಿಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು, ಬೆಂಗಳೂರಿನ ಕುಡಿಯುವ ನೀರಿನ ಭವಿಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಆಗಸ್ಟ್ 25: ಕಾವೇರಿ ನದಿಯ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಹೋರಾಟಗಾರರು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕೆಆರ್ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕುವ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನಿಂದ ಕನ್ನಂಬಾಡಿವರೆಗೂ ರ್ಯಾಲಿ ನಡೆಸುತ್ತಿರುವ ಹೋರಾಟಗಾರರು, ಮಧ್ಯಮಾರ್ಗದಲ್ಲಿ ಇನ್ನೂ ಹಲವು ಕನ್ನಡಪರ ಕಾರ್ಯಕರ್ತರನ್ನು ಸೇರಿಸಿಕೊಂಡು, ನೂರಾರು ವಾಹನಗಳಲ್ಲಿ ಕೆಆರ್ಎಸ್ ಡ್ಯಾಂ ತಲುಪುವ ಸಿದ್ಧತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯ ಸರ್ಕಾರ ಈಗಾಗಲೇ ತಮಿಳುನಾಡಿಗೆ ಸಾಕಷ್ಟು ನೀರನ್ನು ಬಿಡುಗಡೆ ಮಾಡಿದೆ ಎಂದು ಆರೋಪಿಸಿದರು. ಇದೀಗ ಕಾವೇರಿ ನೀರು ನಿರ್ವಹಣಾ ಸಮಿತಿಯು ಮತ್ತೆ 9,000 ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ಬಿಡುವಂತೆ ಆದೇಶಿಸಿರುವುದು ರಾಜ್ಯಕ್ಕೆ ಬಹಳ ಹೊರೆಯಾಗಿದೆ ಎಂದು ಕಿಡಿಕಾರಿದರು. ಈ ನಿರ್ಧಾರದಿಂದ ಬೆಂಗಳೂರಿನಲ್ಲಿ ಭವಿಷ್ಯದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಎಚ್ಚರಿಸಿದರು.
ರಾಜ್ಯದ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದ ವಾಟಾಳ್, ಇತ್ತೀಚೆಗೆ ನಡೆದ ಅಸೆಂಬ್ಲಿ ಅಧಿವೇಶನದಲ್ಲಿ ಕಾವೇರಿ ನೀರು ಹಂಚಿಕೆ ಬಗ್ಗೆ ಗಂಭೀರ ಚರ್ಚೆ ನಡೆಯದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದರು. ಭ್ರಷ್ಟಾಚಾರದ ಆರೋಪಗಳು ಮತ್ತು ರಾಜಕೀಯ ಜಟಾಪಟಿಗಳ ನಡುವೆ ಕಾವೇರಿ ನೀರಿನಂತಹ ಪ್ರಮುಖ ವಿಷಯವನ್ನು ಕಡೆಗಣಿಸಲಾಗಿದೆ ಎಂದು ಆಕ್ರೋಶಗೊಂಡರು. ಬೆಂಗಳೂರು ಶಾಸಕರಿಗೆ ಮಾನ ಮರ್ಯಾದೆ ಇದ್ದರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
