ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
Charmadi Ghat Landslide: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸಂಪರ್ಕ ಕೊಂಡಿಯಾಗಿರುವ ಚಾರ್ಮಾಡಿ ಘಾಟ್ನಲ್ಲಿ ಧಾರಾಕಾರ ಮಳೆಯಿಂದ ಭೂಕುಸಿತ ಸಂಭವಿಸಿದೆ. ಅಲೇಖಾನ್ ಸಮೀಪ ರಸ್ತೆಗೆ ಬೃಹತ್ ಬಂಡೆಗಳು ಮತ್ತು ಮಣ್ಣು ಕುಸಿದಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಮಳೆ ಮುಂದುವರಿದರೆ ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ.
ಚಿಕ್ಕಮಗಳೂರು, ಜುಲೈ 8: ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮಘಟ್ಟ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಭೂಕುಸಿತದ ಆತಂಕ ಎದುರಾಗಿದೆ. ಘಾಟ್ನ ಅಲೇಖಾನ್ ಸಮೀಪ ನಿರಂತರ ಮಳೆಯ ಪರಿಣಾಮವಾಗಿ ಬೃಹತ್ ಬಂಡೆಗಳು, ಮಣ್ಣು ಮತ್ತು ಮರಗಳು ಕುಸಿದು ರಸ್ತೆಗೆ ಬಿದ್ದಿವೆ. ಈ ಪ್ರದೇಶವು ಸೂಕ್ಷ್ಮ ಪಶ್ಚಿಮಘಟ್ಟ ಭಾಗವಾಗಿದ್ದು, ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಇಲ್ಲಿ ದಾಖಲಾಗಿದೆ. ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ಪ್ರಮುಖ ಘಾಟ್ ರಸ್ತೆಯ ಅರ್ಧದಷ್ಟು ಭಾಗವು ಕುಸಿದ ಮಣ್ಣು ಮತ್ತು ಬಂಡೆಗಳಿಂದ ಆವೃತವಾಗಿದೆ. ಮಳೆ ಹೀಗೆಯೇ ಮುಂದುವರಿದರೆ ಮತ್ತಷ್ಟು ಭೂಕುಸಿತ ಸಂಭವಿಸುವ ಭೀತಿ ಇದೆ. ಇದರಿಂದ ಸಂಪೂರ್ಣ ಸಂಚಾರ ಸ್ಥಗಿತಗೊಳ್ಳುವ ಆತಂಕ ವ್ಯಕ್ತವಾಗಿದೆ.
ಗುಡ್ಡ ಕುಸಿತ ಸಂಭವಿಸಿದ್ದರೂ ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದುವರೆಗೆ ತೆರವು ಕಾರ್ಯಾಚರಣೆ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಥಳೀಯರ ತಂಡ ಸ್ವತಃ ಮರಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿಯ ಚಾರ್ಮಾಡಿ ಘಾಟ್ನಲ್ಲಿನ ಈ ಪರಿಸ್ಥಿತಿ ವಾಹನ ಸವಾರರು ಮತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
