ಚಿತ್ರದುರ್ಗ: ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ

Edited By: ವಿವೇಕ ಬಿರಾದಾರ

Updated on: Jul 10, 2025 | 10:42 PM

ಚಿತ್ರದುರ್ಗದ ಗಾರೇಹಟ್ಟಿ ಗ್ರಾಮದಲ್ಲಿ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಥಿಲಾವಸ್ಥೆಯಲ್ಲಿದೆ. ಹಂಚುಗಳು ಬಿದ್ದಿವೆ, ಕೊಠಡಿಗಳು ಸೋರುತ್ತಿವೆ. 56 ವಿದ್ಯಾರ್ಥಿಗಳು ಅಪಾಯಕಾರಿ ಪರಿಸ್ಥಿತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ಶೀಘ್ರದಲ್ಲಿ ಸರ್ಕಾರಿ ಶಾಲೆಗೆ ಸುಸಜ್ಜಿತ ಕಟ್ಟಡ ಮತ್ತು ಮೂಲ ಸೌಕರ್ಯ ನೀಡಬೇಕಿದೆ.

ಚಿತ್ರದುರ್ಗ, ಜುಲೈ 10: ಚಿತ್ರದುರ್ಗ (Chitradurga) ನಗರ ಬಳಿಯ ಗಾರೇಹಟ್ಟಿ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (Government Higher Primary School) ಈಗ ಶಿಥಿಲಾವಸ್ಥೆಗೆ ತಲುಪಿದೆ. ಹಂಚುಗಳು ಬಿದ್ದಿದ್ದು, ತಾಡಪಲ್ ಹಾಕಲಾಗಿದೆ.‌ ಪ್ರತಿ ಕೊಠಡಿಯೂ ಸೋರುತ್ತದೆ. ಏಳನೇ ತರಗತಿವರೆಗಿನ ಈ ಶಾಲೆಯಲ್ಲಿ 56ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಶಾಲೆಗೆ ಸುಸಜ್ಜಿತ ಕಟ್ಟಡ ಇಲ್ಲ. ಮತ್ತು ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಇಲ್ಲ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಆರೋಪಿಸಿದ್ದಾರೆ.

ಈ ಬಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸರಸ್ವತಿ ಮಾತನಾಡಿ, ಈಗಾಗಲೇ ಶಾಲಾ ಕಟ್ಟಡ ದುರಸ್ಥಿ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಬಿಇಓ ಮತ್ತು ಡಿಡಿಪಿಐ ಅವರು ಪರಿಶೀಲನೆ ನಡೆಸಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ 1937ರಲ್ಲಿ ನಿರ್ಮಾಣವಾದ ಕಟ್ಟಡ ಈವರೆಗೆ ರಿಪೇರಿ ಕಂಡಿಲ್ಲ. ಹೀಗಾಗಿ, ಕೆಎಮ್​ಇಆರ್​ಸಿ ಯೋಜನೆ ಅಡಿ 19ಲಕ್ಷ ರೂ.‌ ಅನುದಾನದಲ್ಲಿ ದುರಸ್ಥಿಗೆ ಕ್ರಮ ಕೈಗೊಳ್ಳಲಾಗಿದೆ. ಶೀಘ್ರ ಕಟ್ಟಡ ದುರಸ್ಥಿ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದ ಗಾರೇಹಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಸ್ಥಿತಿ ಶೋಚನೀಯವಾಗಿದೆ. ಹೀಗಾಗಿ, ಇನ್ನಾದರು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತು ಸರ್ಕಾರ ಈ ಬಗ್ಗೆ ಗಮನಹರಿಸಬೇಕಿದೆ. ಶೀಘ್ರದಲ್ಲಿ ಸರ್ಕಾರಿ ಶಾಲೆಗೆ ಸುಸಜ್ಜಿತ ಕಟ್ಟಡ ಮತ್ತು ಮೂಲ ಸೌಕರ್ಯ ನೀಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 10, 2025 10:41 PM
Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More