ನಿರುದ್ಯೋಗಿಗಳಿಗೆ ಗುಡ್ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್: ವಿಡಿಯೋ ನೋಡಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗ್ರಾಮೀಣ ಶಾಲೆಗಳ ಅಭಿವೃದ್ಧಿಗಾಗಿ ಹೊಸ ಸಿಎಸ್ಆರ್ ನೀತಿ ಹಾಗೂ ಭಾರತದಲ್ಲೇ ಪ್ರಥಮವಾದ ಖಾಸಗಿ ಉದ್ಯೋಗ ವಿನಿಮಯ ಕೇಂದ್ರವನ್ನು ಘೋಷಿಸಿದ್ದಾರೆ. ಈ ಮೂಲಕ ನಗರಗಳಿಗೆ ವಲಸೆ ತಡೆಯುವುದು, ಗುಣಮಟ್ಟದ ಶಿಕ್ಷಣ ನೀಡುವುದು ಮತ್ತು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ.
ಬೆಂಗಳೂರು, ಜೂನ್ 13: ರಾಜ್ಯದಲ್ಲಿ ಯುವಕರ ಉದ್ಯೋಗಾವಕಾಶ ಹೆಚ್ಚಿಸಲು ಮತ್ತು ಗ್ರಾಮೀಣ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದು, ಭಾರತದಲ್ಲೇ ಪ್ರಥಮವಾದ ಖಾಸಗಿ ಉದ್ಯೋಗ ವಿನಿಮಯ ಕೇಂದ್ರದ ಸ್ಥಾಪನೆ ಪ್ರಮುಖವಾಗಿದೆ. ಖಾಸಗಿ ವಲಯದಲ್ಲಿ ಉದ್ಯೋಗಾಕಾಂಕ್ಷಿಗಳು ಈ ವೇದಿಕೆಯಲ್ಲಿ ನೋಂದಾಯಿಸಿಕೊಳ್ಳಬಹುದು. ಹಾಗೆಯೇ, ಉದ್ಯೋಗದಾತ ಕಂಪನಿಗಳು ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ನುರಿತ ಮಾನವ ಸಂಪನ್ಮೂಲವನ್ನು ಇಲ್ಲಿಂದ ಪಡೆದುಕೊಳ್ಳಬಹುದು. ಇದು ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುವ ಸೇತುವೆಯಾಗಲಿದೆ. ಅದೇ ರೀತಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಹೊಸ ಸಿಎಸ್ಆರ್ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ಸಿಟಿಗಳು ಮತ್ತು ಟೌನ್ಗಳಿಗೆ ವಲಸೆ ಹೋಗುವುದನ್ನು ತಡೆಯಲು ಹಳ್ಳಿಗಳಲ್ಲೇ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಗುರಿಯನ್ನು ಹೊಂದಿದೆ. 2% ಸಿಎಸ್ಆರ್ ಕಡ್ಡಾಯವಾಗಿ ಖರ್ಚು ಮಾಡುವ ಕಂಪನಿಗಳು, ಸರ್ಕಾರ ನೀಡುವ ಮಾದರಿಯ ಪ್ರಕಾರ ಶಾಲೆಗಳನ್ನು ನಿರ್ಮಿಸಿ ಸೌಲಭ್ಯಗಳನ್ನು ಒದಗಿಸಬಹುದು. ಈ ಶಾಲೆಗಳು ಸರ್ಕಾರಿ ಶಾಲೆಗಳಾಗಿಯೇ ಉಳಿಯಲಿವೆ. ಈ ಉಪಕ್ರಮಗಳು ರಾಜ್ಯದಲ್ಲಿ ಯುವ ಸಬಲೀಕರಣ ಮತ್ತು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
