ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ: ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ಯಾವುದೇ ಒತ್ತಡಕ್ಕೆ ಮಣಿಯದೆ, ಪಾರದರ್ಶಕವಾಗಿ, ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡಲು ಸೂಚಿಸಲಾಗಿದೆ. ಸಾರ್ವಜನಿಕ ಕುಂದುಕೊರತೆಗಳ ನಿವಾರಣೆ, ಸಿಎಸ್ಆರ್ ನಿಧಿಗಳ ಸದ್ಬಳಕೆ ಮತ್ತು ಶಿಕ್ಷಣಕ್ಕೆ ಒತ್ತು ಸೇರಿದಂತೆ ಹಲವು ವಿಷಯಗಳ ಬಗ್ಗೆ ಹೊಸ ನೀತಿಗಳನ್ನು ಪ್ರಕಟಿಸಲು ನಿರ್ಧರಿಸಲಾಗಿದೆ.
ಬೆಂಗಳೂರು, ಜೂನ್ 04: ನೂತನ ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ನಿನ್ನೆ ಆರು ಪ್ರಮುಖ ನಿರ್ಧಾರಗಳನ್ನು ಘೋಷಣೆ ಮಾಡಿದ್ದರು. ಆ ಬೆನ್ನಲ್ಲೇ ಇಂದು ಅಧಿಕಾರಿಗಳ ಸಭೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಒತ್ತಡಕ್ಕೆ ಮಣಿಯದೆ ಜನರ ಕೆಲಸ ಮಾಡಬೇಕು. ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ. ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ, ಒತ್ತಡಕ್ಕೆ ಮಣಿಯದೆ ಕೆಲಸ ಮಾಡಿ. ನಮ್ಮ ಶಾಸಕರು, ಸಚಿವರು ಸೇರಿದಂತೆ ಯಾವುದೇ ಒತ್ತಡ ಬಂದರೂ ಅದಕ್ಕೆ ಮಣಿಯದೆ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಜನರಿಗೆ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕು. ತಾಲೂಕು, ಗ್ರಾಮಗಳಿಗೆ ತೆರಳಿ ಅಧಿಕಾರಿಗಳು ಕೆಲಸ ಮಾಡಬೇಕು. ಎಲ್ಲಾ ಇಲಾಖೆಗಳ ಬಾಕಿ ಕೆಲಸದ ಪಟ್ಟಿ ನೀಡಬೇಕು. ಬಾಕಿ ಕೆಲಸದ ಪಟ್ಟಿಯನ್ನು 25 ದಿನದೊಳಗೆ ಪಟ್ಟಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

