ಅರ್ಧ ಗಂಟೆಯಲ್ಲಿ ಮನೆಗೆ ಬಾ..: ಸಚಿವ ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬುಲಾವ್

Updated on: Apr 14, 2026 | 11:10 AM

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಜಮೀರ್ ಅಹಮದ್ ಖಾನ್‌ಗೆ ತುರ್ತು ಬುಲಾವ್ ನೀಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಅಬ್ದುಲ್ ಜಬ್ಬಾರ್ ರಾಜೀನಾಮೆ, ನಜೀರ್ ಅಹಮದ್ ಹುದ್ದೆಯಿಂದ ಬಿಡುಗಡೆಯಾದ ನಂತರ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಸಿಎಂ ನಿವಾಸ ಕಾವೇರಿಯಲ್ಲಿ ಚರ್ಚೆ ನಡೆಯಲಿದೆ.

ಬೆಂಗಳೂರು. ಏ.14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹಮದ್ ಖಾನ್‌ಗೆ ತುರ್ತು ಬುಲಾವ್ ನೀಡಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಇನ್ನೇನು ಕೆಲವೇ ನಿಮಿಷಗಳಲ್ಲಿ ಸಿದ್ದರಾಮಯ್ಯ ಜಮೀರ್ ಅಹಮದ್ ಅವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಲ್ಪಸಂಖ್ಯಾತ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಚುನಾವಣಾ ಪ್ರಚಾರದಲ್ಲಿ ಜಮೀರ್ ಅಹಮದ್ ಭಾಗಿಯಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಅಬ್ದುಲ್ ಜಬ್ಬಾರ್ ಈಗಾಗಲೇ ಅಲ್ಪಸಂಖ್ಯಾತ ಘಟಕದಿಂದ ರಾಜೀನಾಮೆ ನೀಡಿದ್ದಾರೆ. ಇದೇ ಕಾರಣಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ನಜೀರ್ ಅಹಮದ್ ಅವರನ್ನೂ ಕೂಡ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಹೈಕಮಾಂಡ್ ಸೂಚನೆಯಂತೆ ನಜೀರ್ ಅಹಮದ್ ರಾಜೀನಾಮೆ ನೀಡಲು ನಿರಾಕರಿಸಿದ ಕಾರಣ ಅವರನ್ನು ವಜಾಗೊಳಿಸಲಾಗಿದೆ. ಇದೀಗ ಜಮೀರ್ ಅಹಮದ್ ಖಾನ್ ಮತ್ತು ಸಿದ್ದರಾಮಯ್ಯ ನಡುವಿನ ಈ ಚರ್ಚೆಯು ಮತ್ತಷ್ಟು ಗೊಂದಲಗಳನ್ನು ನಿವಾರಿಸುವುದೇ ಅಥವಾ ಹೊಸ ವಿವಾದಗಳನ್ನು ಸೃಷ್ಟಿಸುವುದೇ ಎಂಬುದನ್ನು ಕಾದು ನೋಡಬೇಕಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Apr 14, 2026 11:10 AM
Follow Us