ನವೆಂಬರ್ ಕ್ರಾಂತಿ ಚರ್ಚೆ ಮಧ್ಯೆ ಕೆಎನ್ ರಾಜಣ್ಣ ನಿವಾಸದಲ್ಲಿಂದು ಡಿನ್ನರ್: ಭಾಗಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ
ತುಮಕೂರು ಜಿಲ್ಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಿ ಕಾರ್ಯಕ್ರಮ ಇದ್ದು, ಅದಕ್ಕೆ ತೆರಳುವ ಅವರು ಮಾಜಿ ಸಚಿವ ಕೆಎನ್ ರಾಜಣ್ಣ ಆಯೋಜಿಸಿದ್ದ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಈ ಭೋಜನಕೂಟದಲ್ಲಿ ಸಿಎಂ ಬದಲಾವಣೆ ಹಾಗೂ ಎಸ್.ಸಿ. ಎಸ್.ಟಿ. ಸಮಾವೇಶ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಲವಾರು ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಭಾಗವಹಿಸುವ ನಿರೀಕ್ಷೆಯಿದೆ.
ಬೆಂಗಳೂರು, ನವೆಂಬರ್ 7: ಕರ್ನಾಟಕದಲ್ಲಿ ಡಿನ್ನರ್ ಪಾಲಿಟಿಕ್ಸ್ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತುಮಕೂರು ಜಿಲ್ಲೆಗೆ ಸರ್ಕಾರಿ ಕಾರ್ಯಕ್ರಮದ ನಿಮಿತ್ತ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ, ಮಾಜಿ ಸಚಿವ ಕೆಎನ್ ರಾಜಣ್ಣ ಅವರು ತುಮಕೂರಿನ ಕ್ಯಾತಸಂದ್ರದಲ್ಲಿರುವ ನಿವಾಸದಲ್ಲಿ ಔತಣಕೂಟದಲ್ಲಿ ಆಯೋಜಿಸಿದ್ದು, ಸಿಎಂ ಭಾಗಿಯಾಗಲಿದ್ದಾರೆ. ಈ ಭೋಜನಕೂಟದ ಮೇಲೆ ಈಗ ಎಲ್ಲರ ಚಿತ್ತ ನೆಟ್ಟಿದೆ. ಸಚಿವರಾದ ಡಾ. ಜಿ ಪರಮೇಶ್ವರ, ಎಚ್.ಸಿ. ಮಹದೇವಪ್ಪ, ಎಂ.ಪಿ. ಪಾಟೀಲ್, ದಿನೇಶ್ ಗುಂಡೂರಾವ್, ಎನ್.ಸಿ. ಸುಧಾಕರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರೆಲ್ಲರೂ ಈ ಔತಣಕೂಟದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಭೋಜನಕೂಟದಲ್ಲಿ ಪ್ರಮುಖವಾಗಿ ಸಿಎಂ ಬದಲಾವಣೆ ಕುರಿತು ಹಾಗೂ ಎಸ್ಸಿ ಎಸ್ಟಿಗಳ ಸಮಾವೇಶದ ಕುರಿತು ಕೂಡ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಿಎಂ ಅವರ ಆಪ್ತ ಸಚಿವರು ಸಹ ಈ ಕೂಟದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಭೋಜನಕೂಟವು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
