ನಾಯಕತ್ವ ಬದಲಾವಣೆ ಕ್ರಾಂತಿ ನಡುವೆ ಮತ್ತೊಂದು ಕುರ್ಚಿಗಾಗಿ ಸಿಎಂ-ಡಿಸಿಎಂ ಬಣ ಪೈಪೋಟಿ

Updated on: Nov 21, 2025 | 3:52 PM

ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್​​ನಲ್ಲಿ ತೀವ್ರ ಪೈಪೋಟಿ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತರ ನಡುವೆ ಈ ಸ್ಥಾನಕ್ಕಾಗಿ ಜಟಾಪಟಿ ನಡೆದಿದೆ. ಡಿಕೆ ಶಿವಕುಮಾರ್ ಅವರು ತಮ್ಮ ಸಹೋದರ ಡಿಕೆ ಸುರೇಶ್ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಸದ್ಯ ಬಮುಲ್ ಅಧ್ಯಕ್ಷರಾಗಿರುವ ಡಿಕೆ ಸುರೇಶ್ ಈ ಪ್ರಭಾವಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಬೆಂಗಳೂರು, ನವೆಂಬರ್​​ 21: ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಭಾರಿ ಪ್ರಮಾಣದಲ್ಲಿ ಗರಿಗೆದರಿವೆ. ಡಿಸಿಎಂ ಡಿಕೆ ಶಿವಕುಮಾರ್​​ ಬಣ ಮತ್ತು ಸಿಎಂ ಸಿದ್ದರಾಮಯ್ಯ ಬಣದ ನಡುವೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡುವಂತೆ ಹಲವು ಶಾಸಕರು ಹೈಕಮಾಂಡ್​​ ನಾಯಕರನ್ನು ಒತ್ತಾಯಿಸಿದ್ದರೆ, ಇತ್ತ ಸಿದ್ದರಾಮಯ್ಯ ಬಣದಿಂದಲೂ ಪ್ರತಿತಂತ್ರ ಸಿದ್ಧವಾಗಿದೆ ಎನ್ನಲಾಗಿದೆ. ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ರಾಜ್ಯಕ್ಕೆ ಭೇಟಿ ನೀಡುತ್ತಿರೋದು ಕುತೂಹಲ ಮೂಡಿಸಿದೆ. ಈ ನಡುವೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೂ ಕಾಂಗ್ರೆಸ್‌ನಲ್ಲಿ ಭಾರೀ ಪೈಪೋಟಿ ಶುರುವಾಗಿದ್ದು, ಅಲ್ಲಿಯೂ ಸಿಎಂ ಮತ್ತು ಡಿಸಿಎಂ ಬಣಗಳ ತಿಕ್ಕಾಟ ಆರಂಭಗೊಂಡಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರ ಆಪ್ತರೂ ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷರಾಗಲು ಪ್ರಯತ್ನ ನಡೆಸುತ್ತಿದ್ದಾರೆ. ಒಂದು ಕಡೆಯಲ್ಲಿ ಡಿಕೆ ಸುರೇಶ್​ಗೆ ಪಟ್ಟಕಟ್ಟಲು ಡಿಕೆಶಿ ಸಿದ್ದತೆ ಮಾಡಿಕೊಂಡರೆ, ಮತ್ತೊಂದು ಕಡೆಯಲ್ಲಿ ಸಿದ್ದರಾಮಯ್ಯ ಆಪ್ತರು ಅಧ್ಯಕ್ಷ ಗಿರಿಯತ್ತ ಚಿತ್ತನೆಟ್ಟಿದ್ದಾರೆ. ಹೀಗಾಗಿ KMF ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ ಶುರುವಾಗಿದೆ. ಈಗಾಗಲೇ ಈ ಸ್ಥಾನದ ಆಕಾಂಕ್ಷಿಗಳಾಗಿರುವ ಡಿಕೆ ಸುರೇಶ್, ಕೆ.ವೈ. ನಂಜೇಗೌಡ, ಭೀಮಾ‌ ನಾಯ್ಕ್ ಮಾತ್ರವಲ್ಲದೆ, ಈ ರೇಸ್​​​ಗೆ ರಾಘವೇಂದ್ರ ಹಿಟ್ನಾಳ್ ಕೂಡ ಎಂಟ್ರಿಯಾಗಿರೋದು ಪೈಪೋಟಿ ಹೆಚ್ಚಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 21, 2025 03:35 PM
Loading...
Unable to load recommendations.
Follow Us