ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹ: ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (AKSSA) ನಿರಂತರ ಹೋರಾಟ ನಡೆಸುತ್ತಿದೆ. ಧಾರವಾಡದಲ್ಲಿ ನಡೆದ ಬೃಹತ್ ಪ್ರತಿಭಟನೆ, ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಭೇಟಿ ಹಾಗೂ ಹೈಕೋರ್ಟ್ ಮಧ್ಯಪ್ರವೇಶದ ನಂತರವೂ ಬೇಡಿಕೆ ಸಂಪೂರ್ಣ ಈಡೇರಿಲ್ಲ. ಹೀಗಾಗಿ ಮತ್ತೊಂದು ಸುತ್ತಿನ ಹೋರಾಟಕ್ಕೀಗ ಸಂಘಟನೆ ಮುಂದಾಗಿದೆ.
ಧಾರವಾಡ, ಆಗಸ್ಟ್ 24: ಕರ್ನಾಟಕದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿದ್ದು, ಇವುಗಳ ಭರ್ತಿಗೆ ಆಗ್ರಹಿಸಿ ಕಳೆದ ಹಲವಾರು ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಾ ಬಂದಿರುವ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (AKSSA) ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧತೆ ನಡೆಸಿದೆ. ಕಳೆದ ವರ್ಷ ಸೆಪ್ಟೆಂಬರ್ 25ರಂದು ಧಾರವಾಡದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ 8 ರಿಂದ 10 ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಶ್ರೀನಗರ ವೃತ್ತದಿಂದ ಜುಬ್ಲಿ ವೃತ್ತದವರೆಗೆ ಮೆರವಣಿಗೆ ನಡೆಸಿ, ನಂತರ ಧರಣಿ ನಡೆಸಿದ ಈ ಹೋರಾಟ ನಗರದ ಜನಜೀವನವನ್ನು ಸ್ತಬ್ಧಗೊಳಿಸಿತ್ತು. ಡಿಸೆಂಬರ್ನಲ್ಲಿ ಮತ್ತೊಮ್ಮೆ ಹೋರಾಟಕ್ಕೆ ಕರೆ ನೀಡಿದಾಗ, ಹಿಂದಿನ ಅಹಿತಕರ ಘಟನೆಗಳು ಮತ್ತು ಸಾರ್ವಜನಿಕರಿಗೆ ತೊಂದರೆಯ ನೆಪವೊಡ್ಡಿ ಪೊಲೀಸರು ಅನುಮತಿ ನಿರಾಕರಿಸಿದರು. ಕೊನೆಗೆ, ಅಕ್ಸಾ ಧಾರವಾಡ ಹೈಕೋರ್ಟ್ ಮೆಟ್ಟಿಲೇರಿತು. ಹೈಕೋರ್ಟ್ ನಿರ್ದೇಶನದಂತೆ, ಸಂಘಟನೆಯ ಅಧ್ಯಕ್ಷ ಕಾಂತ್ ಕುಮಾರ್ ಅವರು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಆಗ ಅವರಿಂದ ಹುದ್ದೆಗಳ ಭರ್ತಿಗೆ ಭರವಸೆ ನೀಡಿದ್ದರು. ಹೀಗಿದ್ದರೂ ಈಗ ನಡೆಯುತ್ತಿರುವುದು ಕೇವಲ ಬೆರಳಣಿಕೆಯಷ್ಟು ಹುದ್ದೆಗಳ ಭರ್ತಿ ಮಾತ್ರ ಎಂದು ಆರೋಪಿಸಿ, ಸಂಘಟನೆಯು ತನ್ನ ಹೋರಾಟವನ್ನು ಮುಂದುವರೆಸಿದೆ. ಇತ್ತೀಚೆಗೆ ಹೈಕೋರ್ಟ್, ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಗರಿಷ್ಠ 100 ಜನರೊಂದಿಗೆ ಪ್ರತಿಭಟನೆ ನಡೆಸಲು ಅಕ್ಸಾಗೆ ಅನುಮತಿ ನೀಡಿತ್ತು ಎನ್ನುವುದು ಕೂಡ ಇಲ್ಲಿ ಮುಖ್ಯವಾದ ವಿಚಾರವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

