ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

Edited By:

Updated on: Sep 16, 2025 | 9:37 AM

ಧರ್ಮಸ್ಥಳ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾ. ನಾಗಪ್ರಸನ್ನ ಪೀಠವು ಎಸ್​ಐಟಿಗೆ ನೋಟಿಸ್ ನೀಡಿದೆ. ಸ್ಥಳೀಯರಿಬ್ಬರು ಚಿನ್ನಯ್ಯ ಶವ ಹೂತಿರುವುದನ್ನು ನೋಡಿದ್ದೇವೆಂದು ಎಸ್​​ಐಟಿಗೆ ನೀಡಿದ್ದ ದೂರನ್ನು ಪರಿಗಣಿಸಿಲ್ಲ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣ ಗುರುವಾರ ವಿಚಾರಣೆಗೆ ಬರಲಿದೆ. ಹೀಗಾಗಿ ಮತ್ತೆ ಉತ್ಖನನ ನಡೆಯುತ್ತಾ ಎಂಬ ಕುತೂಹಲ ಸೃಷ್ಟಿಯಾಗಿದೆ.

ಮಂಗಳೂರು, ಸೆಪ್ಟೆಂಬರ್ 16: ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಧರ್ಮಸ್ಥಳದಲ್ಲಿ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸುವಂತೆ ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾ‌‌ಯಮೂರ್ತಿ ನಾಗಪ್ರಸನ್ನ ಪೀಠ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡು ಎಸ್ಐಟಿಗೆ ನೊಟೀಸ್ ಜಾರಿ ಮಾಡಿದೆ. ಸ್ಥಳೀಯರಾದ ಪುರಂದರ ಗೌಡ ಹಾಗೂ ತುಕಾರಾಮ್ ಗೌಡ ಎಂಬ ಇಬ್ಬರು ಸಾಕ್ಷಿದಾರರು, ನೇತ್ರಾವತಿ ಕಾಡಿನಲ್ಲಿ ಚಿನ್ನಯ್ಯ ಶವವನ್ನು ಹೂಳುವಾಗ ನೋಡಿದ್ದೇವೆ ಎಂದು ಎಸ್‌ಐಟಿಗೆ ದೂರು ನೀಡಿದ್ದರು. ಆದರೆ, ಆ ದೂರನ್ನು ಎಸ್​ಐಟಿ ಪರಿಶೀಲನೆ ನಡೆಸದ ಹಿನ್ನೆಲೆಯಲ್ಲಿ ಇಬ್ಬರೂ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸರ್ಕಾರದ ಪರ ವಿಶೇಷ ಅಭಿಯೋಜಕ ಬಿ.ಎನ್. ಜಗದೀಶ್ ಹೈಕೋರ್ಟ್ ನೊಟೀಸ್ ಸ್ವೀಕರಿಸಿದ್ದು, ಗುರುವಾರ ಕೋರ್ಟ್‌ಗೆ ಉತ್ತರ ಸಲ್ಲಿಸುವ ಸಾಧ್ಯತೆ ಇದೆ.

ತಕ್ಷಣ ಸ್ಥಳ ಗುರುತು ಮಾಡಿ ಉತ್ಖನನ ನಡೆಸುವಂತೆ ಅರ್ಜಿದಾರರು ಕೋರಿದ್ದಾರೆ. ಅಲ್ಲದೇ, ಕೋರ್ಟ್ ಕಮಿಷನರ್ ಅಥವಾ ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ತನಿಖೆ ನಡೆಯಲಿ ಹಾಗೂ ತನಿಖೆಯ ಪ್ರತೀ ಹಂತದ ಮಾಹಿತಿಯನ್ನು ಕೋರ್ಟ್‌ಗೆ ಸಲ್ಲಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಮುಂದಿನ ವಿಚಾರಣೆ ಗುರುವಾರ ನಡೆಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More