ಕನಕಪುರ BCM ಹಾಸ್ಟೆಲ್‌ಗೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ತಿಗಣೆ ಕಾಟ, ಬಸ್, ಮೂಲಭೂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ದೂರು

Updated on: Sep 14, 2026 | 6:17 AM

ಕನಕಪುರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿ.ಸಿ.ಎಂ ಹಾಸ್ಟೆಲ್‌ಗೆ ಅನಿರೀಕ್ಷಿತ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ರಾತ್ರಿ ಊಟ ಮಾಡಿ, ಹಾಸ್ಟೆಲ್ ಕೊಠಡಿ, ಶೌಚಾಲಯಗಳನ್ನು ಪರಿಶೀಲಿಸಿದರು. ತಿಗಣೆ ಸಮಸ್ಯೆ, ಬಸ್ ಸೌಲಭ್ಯ, ಬಸ್ ಪಾಸ್ ಬಳಕೆಯ ಸಮಸ್ಯೆ, ಕಾಲೇಜು ಶುಲ್ಕದ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು, ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳ ಮೂಲಕ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕನಕಪುರ, ಸೆ.14: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿರುವ ಬಿಸಿಎಂ ಹಾಸ್ಟೆಲ್‌ಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತಮ್ಮ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕನಕಪುರಕ್ಕೆ ಬಂದಿದ್ದ ಅವರು, ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಡಿ.ಕೆ. ಶಿವಕುಮಾರ್ ಅವರು ರಾತ್ರಿ ಊಟ ಸವಿದರು. ನಂತರ ವಿದ್ಯಾರ್ಥಿಗಳ ಕೊಠಡಿಗಳು, ಶೌಚಾಲಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನೇರವಾಗಿ ಕೇಳಿದಾಗ, ತಿಗಣೆ ಕಾಟಕ್ಕೆ ಔಷಧಿಯ ಕೊರತೆ, ಬಸ್ ವ್ಯವಸ್ಥೆಯ ಸಮಸ್ಯೆ, ಕಾಲೇಜು ಶುಲ್ಕ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಗಮನ ಸೆಳೆದರು. ಗುಲ್ಬರ್ಗ, ರಾಯಚೂರು, ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದು ಕನಕಪುರದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ವಿಷಯ ಡಿ.ಕೆ. ಶಿವಕುಮಾರ್ ಅವರಿಗೆ ಆಶ್ಚರ್ಯ ತಂದಿತು. ಹಾಸ್ಟೆಲ್‌ನಲ್ಲಿ 75% ಸೌಲಭ್ಯಗಳು ಉತ್ತಮವಾಗಿದ್ದು, 25% ಸುಧಾರಣೆಯ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಬರೆದುಕೊಟ್ಟಿರುವ ಸಮಸ್ಯೆಗಳ ಪಟ್ಟಿಯನ್ನು ಜಿಲ್ಲಾಧಿಕಾರಿ ಮತ್ತು ಸಿಇಒ ಅವರಿಗೆ ನೀಡಿ ಸಂಪೂರ್ಣ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us