ಕೋಲಾರ, ಆ.27: ಕೋಲಾರ ಜಿಲ್ಲೆ ಶ್ರೀನಿವಾಸಪುರದ ಹಲವು ಗ್ರಾಮಗಳಲ್ಲಿ ಕಳೆದ ಮೂರು ದಿನಗಳಿಂದ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. 3 ದಿನಗಳಲ್ಲಿ 560 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲಾಗಿದೆ. ಶ್ರೀನಿವಾಸಪುರ ತಾಲೂಕಿನ ಚಿಂತಗುಂಟ, ಕೇತಗಾನಹಳ್ಳಿಯಲ್ಲಿ ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದೆ. ಡಿಎಫ್ಒ ಏಡುಕೊಂಡಲ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು 60 ಜನ ಒತ್ತುವರಿದಾರರಿಂದ 300 ಎಕರೆಯಷ್ಟು ಒತ್ತುವರಿ ತೆರವು ಮಾಡಿಕೊಳ್ಳಲಾಗುತ್ತಿದೆ.
ಸುಮಾರು 25 ಕ್ಕೂ ಹೆಚ್ಚು ಜೆಸಿಬಿಗಳ ಮೂಲಕ 200 ಕ್ಕೂ ಹೆಚ್ಚು ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.