ನಕಲಿ ಔಷಧ ಕಿಂಗ್ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಬೆಂಗಳೂರು ಸಮೀಪ ಬೃಹತ್ ನಕಲಿ ಔಷಧ ಜಾಲ ಪತ್ತೆಯಾದ ಬೆನ್ನಲ್ಲೇ ಕಿಂಗ್ಪಿನ್ ಪ್ರಶಾಂತ್ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಹೇಳಲಾಗಿತ್ತು. ಈ ಪ್ರಕರಣದ ತನಿಖೆಗಾಗಿ ಹಿರಿಯ ಐಪಿಎಸ್ ಅಧಿಕಾರಿ ವಂಶಿಕೃಷ್ಣ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ರಚನೆಯಾಗಿದೆ. ಪ್ರಶಾಂತ್ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಆತ ಭಾರತದಲ್ಲೇ ಇರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.
ಬೆಂಗಳೂರು, ಆಗಸ್ಟ್ 21: ಬೃಹತ್ ನಕಲಿ ಔಷಧಿ ಜಾಲ ಪತ್ತೆಯಾದ ಪ್ರಕರಣ ಸಂಬಂಧ, ಕ್ಯಾನ್ಸರ್ನಂತಹ ಮಾರಕ ರೋಗಗಳಿಗೆ ನಕಲಿ ಔಷಧಿಗಳನ್ನು ಮಾರಾಟ ಮಾಡುತ್ತಿದ್ದ ಕಿಂಗ್ಪಿನ್ ಪ್ರಶಾಂತ್ಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಆತ ಇದುವರೆಗೂ 40,000ಕ್ಕೂ ಹೆಚ್ಚು ನಕಲಿ ಕ್ಯಾನ್ಸರ್ ಔಷಧ ಬಾಟಲಿಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ಈ ಪ್ರಕರಣದ ಗಂಭೀರತೆ ಅರಿತು ರಾಜ್ಯ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ವಂಶಿಕೃಷ್ಣ ನೇತೃತ್ವದಲ್ಲಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದೆ. ಪ್ರಶಾಂತ್ನ ಪತ್ನಿ ಮತ್ತು ಸಂಬಂಧಿಕರನ್ನು ವಿಚಾರಣೆ ನಡೆಸಲಾಗಿದ್ದು, ಆತ ವಿದೇಶದಲ್ಲಿದ್ದಾನೆ ಎಂದು ಪತ್ನಿ ಹೇಳಿದ್ದಾರೆ. ಆದರೆ, ಭಾರತದಲ್ಲೇ ಇರುವ ಬಗ್ಗೆ ಪೊಲೀಸರಿಗೆ ಅನುಮಾನವಿದೆ. ಆರೋಪಿಯ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ರಾಮನಗರದ ತೋಟದ ಮನೆಯಲ್ಲಿ ನಕಲಿ ಔಷಧಿಗಳನ್ನು ತಯಾರಿಸಿ, ಅಮೆರಿಕಾ ಮೂಲದ ಕಂಪನಿಗಳ ಲೇಬಲ್ ಹಚ್ಚಿ ಮಾರಾಟ ಮಾಡುತ್ತಿದ್ದರು. ಈಗಾಗಲೇ ನಾಲ್ಕು ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

